ನವದೆಹಲಿ: ಜೂನ್ 21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಮುನ್ನ ಟೆಲಿಗ್ರಾಮ್ ಆಯಪ್ ಬಳಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ (ಜೂನ್ 19) ಎತ್ತಿಹಿಡಿದಿದೆ.
ಸರ್ಕಾರದ ಈ ಕ್ರಮವು ಸಾರ್ವಜನಿಕ ಹಿತಾಸಕ್ತಿಗೆ ಪೂರಕವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ನೀಟ್-ಯುಜಿ ಮರುಪರೀಕ್ಷೆಗೂ ಮುನ್ನ ಆಯಪ್ ಅನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಜೂನ್ 22ರವರೆಗೆ ಟೆಲಿಗ್ರಾಮ್ ಆಯಪ್ ಬಳಕೆಯನ್ನು ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಟೆಲಿಗ್ರಾಮ್ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ರಜಾ ಪೀಠದ ನ್ಯಾಯಮೂರ್ತಿ ತೇಜಸ್ ಕಾರಿಯಾ ನಿನ್ನೆ ಕಾಯ್ದಿರಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ವಾದ-ಪ್ರತಿವಾದಗಳನ್ನು ಆಲಿಸಿದ ನಂತರ, ಪ್ರಸ್ತುತ ಪರಿಸ್ಥಿತಿಯನ್ನು ಮನಗಂಡು ಕೇಂದ್ರ ಸರ್ಕಾರ ನಿಯಮಾನುಸಾರವೇ ಈ ಕ್ರಮ ಕೈಗೊಂಡಿದೆ ಎಂದು ಹೈಕೋರ್ಟ್ ಹೇಳಿದೆ.
ಗುರುವಾರ ಹೈಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ್ದ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧಿಕಾರಿ ಮಯಾಂಕ್ ಅವರು, ಟೆಲಿಗ್ರಾಂ ಆಯಪ್ ಅನ್ನು ಸೈಬರ್ ಅಪರಾಧ, ಹಣಕಾಸು ವಂಚನೆ, ಭಯೋತ್ಪಾದನೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಂತಹ ದೇಶವಿರೋಧಿ ಮತ್ತು ಕಾನೂನುಬಾಹಿರ ಚಟುವಟಿಕೆಗಳಿಗೆ ವ್ಯಾಪಕವಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಕೋರ್ಟ್ ಗಮನಕ್ಕೆ ತಂದಿದ್ದರು.
ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಗೂ ಟೆಲಿಗ್ರಾಮ್ ಪರ ಹಿರಿಯ ವಕೀಲ ಧ್ರುವ ಮೆಹ್ರಾ ಅವರು ವಾದ ಮಂಡಿಸಿದ್ದರು.

