ನವದೆಹಲಿ: ತೃಣಮೂಲ ಕಾಂಗ್ರೆಸ್ನಲ್ಲಿ ಭಿನ್ನಮತದ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಪಕ್ಷದ ಸಂಸದ ಶತ್ರುಘ್ನ ಸಿನ್ಹಾ ಅವರು ತಾವು ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರೊಂದಿಗೇ ಇರುವುದಾಗಿ ಸ್ಪಷ್ಟಪಡಿಸಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.
ಅಸನ್ಸೋಲ್ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಯಾಗಲು ಮಮತಾ ಬ್ಯಾನರ್ಜಿ, ತೃಣಮೂಲ ಕಾಂಗ್ರೆಸ್ ಹಾಗೂ ಪಶ್ಚಿಮ ಬಂಗಾಳದ ಜನರ ಬೆಂಬಲವೇ ಕಾರಣ ಎಂದು ಅವರು ಹೇಳಿದರು.
2019ರ ಲೋಕಸಭಾ ಚುನಾವಣೆಯಲ್ಲಿ ಪಾಟ್ನಾದಲ್ಲಿ ಸೋತ ಬಳಿಕ ರಾಜಕೀಯವಾಗಿ ಕಠಿಣ ಪರಿಸ್ಥಿತಿ ಎದುರಿಸುತ್ತಿದ್ದ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ತಮ್ಮ ಬೆಂಬಲಕ್ಕೆ ನಿಂತಿದ್ದರು. ಅವರ ಆಹ್ವಾನದ ಮೇರೆಗೆ ಅಸನ್ಸೋಲ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದೇನೆ ಎಂದು ಸಿನ್ಹಾ ಹೇಳಿದರು.
ತಮ್ಮ ಬಗ್ಗೆ ಕೇಳಿ ಬರುತ್ತಿರುವ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದ ಅವರು, ತಾವು ಯಾವುದೇ ಬಂಡಾಯ ಗುಂಪಿನ ಭಾಗವಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಸತ್ಯವನ್ನು ನೇರವಾಗಿ ಹೇಳುವುದು ತಮ್ಮ ಸ್ವಭಾವವಾಗಿದ್ದು, ಅದನ್ನು ಬಂಡಾಯ ಎಂದು ಪರಿಗಣಿಸಿದರೆ ತಮಗೆ ಆಕ್ಷೇಪವಿಲ್ಲ ಎಂದರು.
'ನನ್ನ ಕಷ್ಟದ ಸಮಯದಲ್ಲಿ ಮಮತಾ ಬ್ಯಾನರ್ಜಿ ನನ್ನೊಂದಿಗೆ ನಿಂತಿದ್ದರು. ಆದ್ದರಿಂದ ಅವರ ಕಷ್ಟದ ಸಂದರ್ಭದಲ್ಲಿ ಅವರನ್ನು ತೊರೆಯುವ ಪ್ರಶ್ನೆಯೇ ಇಲ್ಲ. ತೃಣಮೂಲ ಕಾಂಗ್ರೆಸ್ ಮತ್ತು ಮಮತಾ ಬ್ಯಾನರ್ಜಿ ಜೊತೆ ನಿಲ್ಲುವುದು ನನ್ನ ಕರ್ತವ್ಯ' ಎಂದು ಸಿನ್ಹಾ ಹೇಳಿದರು.

