ನವದೆಹಲಿ: ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಕ್ಷವು(ಸಿಜೆಪಿ) ದೆಹಲಿಯ ಜಂತರ್ಮಂತರ್ನಲ್ಲಿ ನಡೆಸುತ್ತಿರುವ ಪ್ರತಿಭಟನೆ ಭಾನುವಾರ 16ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆ ಬೆಂಬಲಿಸಿ ಸತ್ಯಾಗ್ರಹ ಕೈಗೊಂಡಿರುವ ಹೋರಾಟಗಾರ ಸೋನಮ್ ವಾಂಗ್ಚೂಕ್ ಅವರ ಉಪವಾಸ 8 ದಿನಕ್ಕೆ ಕಾಲಿಟ್ಟಿದ್ದು, ಸುಮಾರು 6 ಕೆ.ಜಿ.ತೂಕ ಕಳೆದುಕೊಂಡಿದ್ದಾರೆ.
ವೈದ್ಯರು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, ಕಳೆದ ಏಳು ದಿನಗಳಲ್ಲಿ ವಾಂಗ್ಚೂಕ್ ಅವರು ಸುಮಾರು 6 ಕೆ.ಜಿ ತೂಕ ಕಳೆದುಕೊಂಡಿದ್ದು, ಅವರ ತೂಕ 60.95 ಕೆಜಿಗೆ ಕುಸಿದಿದೆ. ಅವರ ರಕ್ತದೊತ್ತಡ 112/70 mm Hg ಮತ್ತು ರಕ್ತದಲ್ಲಿನ ಸಕ್ಕರೆ ಪ್ರಮಾಣ 67 mg/dL ಗೆ ಇಳಿಕೆಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ರಿಯಾ ಪೋಷಕರ ಭೇಟಿ
ನೀಟ್ ಆಕಾಂಕ್ಷಿ ರಿಯಾ ಕುಮಾರಿ ಥಾಪಾ ಅವರ ಪೋಷಕರು ಭಾನುವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಸಿಜಿಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ದೀಪ್ಕೆ, ಭಾರತೀಯ ಸೇನೆಯ ನಿವೃತ್ತ ಯೋಧರಾಗಿರುವ ರಿಯಾ ಅವರ ತಂದೆ, ವಿದ್ಯಾರ್ಥಿಗಳ ಈ ಹೋರಾಟದಲ್ಲಿ ಭಾಗಿಯಾಗಿದ್ದರು. ನಮ್ಮ ಕುಟುಂಬಕ್ಕೆ ಆದ ನಷ್ಟ ಇನ್ಯಾವ ಕುಟುಂಬಕ್ಕೂ ಆಗಬಾರದು. ಇಂತಹ ಘಟನೆಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಒತ್ತಾಯಿಸಿದರು ಎಂದು ಬರೆದುಕೊಂಡಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದ ರಿಯಾ ತಮ್ಮ ಜೀವವನ್ನೇ ಕಳೆದುಕೊಂಡಿದ್ದಾರೆ ಎಂಬುದು ಪೋಷಕರ ಆರೋಪ.

