ನವದೆಹಲಿ: ಜುಲೈ 20ರಿಂದ ಸಂಸತ್ತಿನ ಅಧಿವೇಶನ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅಧಿವೇಶನದಲ್ಲಿ ಐದು ಹೊಸ ಮಸೂದೆಗಳನ್ನು ಮಂಡಿಸುವ ಸಾಧ್ಯತೆ ಇದೆ.
'ನೀಟ್-ಯುಜಿ' ಪ್ರಶ್ನೆಪತ್ರಿಕೆ ಸೋರಿಕೆ, ಪಶ್ಚಿಮ ಏಷ್ಯಾ ಯುದ್ಧದ ವೇಳೆ ನಡೆದ ದಾಳಿಗಳಲ್ಲಿ ಭಾರತೀಯ ನಾವಿಕರ ಸಾವು, ಪೆಟ್ರೋಲ್ನಲ್ಲಿ ಎಥೆನಾಲ್ ಮಿಶ್ರಣ ಮಾಡುತ್ತಿರುವುದಕ್ಕೆ ದೇಶದಾದ್ಯಂತ ಕಳವಳ ವ್ಯಕ್ತವಾಗಿರುವುದನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ಮೇಲೆ ಮುಗಿಬೀಳುವ ಸಾಧ್ಯತೆ ಇದೆ.
ವಿಪಕ್ಷಗಳ ಈ ದಾಳಿಗೆ ಎದಿರೇಟು ನೀಡುವುದು ಸೇರಿ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಲು ಎನ್ಡಿಎ ಮೈತ್ರಿಕೂಟದ ನಾಯಕರು ಇಂದು (ಶುಕ್ರವಾರ) ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗಂಭೀರ ಆರೋಪಗಳಡಿ ಸತತವಾಗಿ 30 ದಿನ ಪೊಲೀಸರ ವಶವಾಗುವ ಪ್ರಧಾನಿ, ಕೇಂದ್ರ ಸಚಿವರು ಹಾಗೂ ಮುಖ್ಯಮಂತ್ರಿಗಳನ್ನು ಅವರ ಹುದ್ದೆಗಳಿಂದ ತೆಗೆದು ಹಾಕುವುದಕ್ಕೆ ಸಂಬಂಧಿಸಿದ ಅವಕಾಶಗಳನ್ನು ಒಳಗೊಂಡ ಸಂವಿಧಾನ ತಿದ್ದುಪಡಿ ಮಸೂದೆ ಕುರಿತ ವರದಿಯನ್ನು ಜಂಟಿ ಸದನ ಸಮಿತಿ ಅನುಮೋದಿಸುವ ಸಾಧ್ಯತೆ ಇದೆ. ಜೊತೆಗೆ, ಈ ಕುರಿತು ಸಮಿತಿಯು ಮಾಡುವ ಶಿಫಾರಸುಗಳ ಆಧಾರದಲ್ಲಿ ತಿದ್ದುಪಡಿ ಮಾಡುವುದಕ್ಕೆ ಸರ್ಕಾರ ಸಿದ್ಧವಾಗಿದೆ ಎಂದೂ ಮೂಲಗಳು ಹೇಳಿವೆ.
ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನೀಡುವುದು, ಕ್ಷೇತ್ರಗಳ ಪುನರ್ವಿಂಗಡಣೆ ಮಸೂದೆಗಳನ್ನು ಕೂಡ ಸರ್ಕಾರ ಮತ್ತೊಮ್ಮೆ ಮಂಡಿಸುವ ಸಾಧ್ಯತೆ ಇದೆ.
ಕೇಂದ್ರ ಸರ್ಕಾರ ಕೈಗೆತ್ತಿಕೊಳ್ಳಲಿರುವ ಹೊಸ ವಿಧೇಯಕಗಳಿವು...
1) ಆದಾಯ ತೆರಿಗೆ (ತಿದ್ದುಪಡಿ) ವಿಧೇಯಕ-2026
2) ಸರ್ವೋಚ್ಚ ನ್ಯಾಯಾಲಯ (ನ್ಯಾಯಾಧೀಶರ ಸಂಖ್ಯೆ) ತಿದ್ದುಪಡಿ ವಿಧೇಯಕ- 2026
3) ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ವಿಧೇಯಕ-2026
4) ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ (ತಿದ್ದುಪಡಿ) ವಿಧೇಯಕ-2026
5) ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ-2026
ಲೋಕಸಭೆಯಲ್ಲಿ ಈ ಹಿಂದೆ ಮಂಡಿಸಲಾಗಿದ್ದ ಈ ಕೆಳಗಿನ ಎರಡು ವಿಧೇಯಕಗಳನ್ನು ಕೇಂದ್ರ ಸರ್ಕಾರ ಮತ್ತೊಮ್ಮೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.
* ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ನಿಯಮಗಳು-2026 (ಈ ಮಸೂದೆಯನ್ನು ಮಾರ್ಚ್ 25ರಂದು ಲೋಕಸಭೆಯಲ್ಲಿ ಮಂಡಿಸಲಾಗಿತ್ತು)
* 'ವಿಕಸಿತ ಭಾರತ ಶಿಕ್ಷಾ ಅಧಿಷ್ಠಾನ ಮಸೂದೆ-2026' (ಈ ವಿಧೇಯಕವನ್ನು 2025ರ ಡಿಸೆಂಬರ್ 15ರಂದು ಲೋಕಸಭೆಯಲ್ಲಿ ಮಂಡಿಸಲಾಗಿತ್ತು ಮತ್ತು ಜಂಟಿ ಸಮಿತಿಗೆ ಒಪ್ಪಿಸಲಾಗಿತ್ತು)

