ನವದೆಹಲಿ: ರಾಷ್ಟ್ರಗೀತೆ 'ಜನ ಗಣ ಮನ'ಕ್ಕೆ ಅಡ್ಡಿಪಡಿಸಿದರೆ ಶಿಕ್ಷೆ ವಿಧಿಸುವಂತೆಯೇ, ಇನ್ನು ಮುಂದೆ 'ವಂದೇ ಮಾತರಂ' ಗೀತೆಗೆ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ.
ಜುಲೈ 20ರಿಂದ ಆರಂಭವಾಗಲಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಂಡಿಸಲು ಉದ್ದೇಶಿಸಿರುವ ವಿಧೇಯಕದಲ್ಲಿ ಈ ಪ್ರಸ್ತಾವನೆ ಇದೆ.
ಗೃಹ ಸಚಿವ ಅಮಿತ್ ಶಾ ಅವರು 'ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ (ತಿದ್ದುಪಡಿ) ವಿಧೇಯಕ-2026' ಅನ್ನು ಪರಿಶೀಲನೆ ಮತ್ತು ಅಂಗೀಕಾರಕ್ಕಾಗಿ ರಾಜ್ಯಸಭೆಯ ಕಾರ್ಯಸೂಚಿಯಲ್ಲಿ ಪಟ್ಟಿ ಮಾಡಿದ ನಂತರ ಸದನದಲ್ಲಿ ಮಂಡಿಸಲಿದ್ದಾರೆ.
ಈ ವಿಧೇಯಕದ ಪ್ರಕಾರ, ಯಾರಾದರೂ ಉದ್ದೇಶಪೂರ್ವಕವಾಗಿ ರಾಷ್ಟ್ರಗೀತೆ ಅಥವಾ ಗಾಯನಕ್ಕೆ ಅಡ್ಡಿಪಡಿಸುವುದು, ಗಾಯನದಲ್ಲಿ ತೊಡಗಿರುವ ಯಾವುದೇ ಸಭೆಯಲ್ಲಿ ಅಡಚಣೆ ಉಂಟು ಮಾಡುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ, ದಂಡ ಅಥವಾ ಇವೆರಡನ್ನೂ ವಿಧಿಸಬಹುದಾಗಿದೆ.
ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ವಿಧೇಯಕಕ್ಕೆ ಅನುಮೋದನೆ ಸಿಕ್ಕಿದೆ. ಸರ್ಕಾರವು ಇತ್ತೀಚೆಗಷ್ಟೇ ಅಧಿಕೃತ ಕಾರ್ಯಕ್ರಮಗಳಲ್ಲಿ 'ವಂದೇ ಮಾತರಂ' ಅನ್ನು ಪೂರ್ತಿಯಾಗಿ ಹಾಡುವುದನ್ನು ಕಡ್ಡಾಯಗೊಳಿಸಿದೆ.
1950ರ ಜನವರಿ 24ರಂದು ನಡೆದ ಸಭೆಯೊಂದರಲ್ಲಿ ಅಂದಿನ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು, ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಐತಿಹಾಸಿಕ ಪಾತ್ರ ವಹಿಸಿದ ಬಂಕಿಮಚಂದ್ರ ಚಟರ್ಜಿ ಅವರು ರಚಿಸಿದ 'ವಂದೇ ಮಾತರಂ' ಗೀತೆಯನ್ನು 'ಜನ ಗಣ ಮನ' ಗೀತೆಗೆ ಸಮಾನವಾಗಿ ಗೌರವಿಸಬೇಕು ಮತ್ತು ಸಮಾನ ಸ್ಥಾನಮಾನ ನೀಡಬೇಕು ಎಂದು ಹೇಳಿದ್ದರು. ಇದುವೇ ಈ ವಿಧೇಯಕದ ಮುಖ್ಯ ಉದ್ದೇಶವೆಂದು ಕೇಂದ್ರ ಸರ್ಕಾರ ತಿಳಿಸಿದೆ.
ಪ್ರಸ್ತುತ, ರಾಷ್ಟ್ರಗೀತೆಯಾಗಿ ಗೌರವಿಸಲ್ಪಡುವ 'ವಂದೇ ಮಾತರಂ' ಗಾಯನಕ್ಕೆ ಆಗುವ ಅಪಮಾನವನ್ನು ತಡೆಯಲು ಯಾವುದೇ ನಿರ್ದಿಷ್ಟ ಕಾನೂನುಬದ್ಧ ನಿಬಂಧನೆ ಇಲ್ಲ ಎಂದೂ ಸರ್ಕಾರ ಹೇಳಿದೆ.

