ನವದೆಹಲಿ: ನೀಟ್ ಪರೀಕ್ಷಾ ಅಕ್ರಮದ ವಿರುದ್ಧ ದೇಶದಾದ್ಯಂತ ನಡೆದ ಪ್ರತಿಭಟನೆಗಳನ್ನು ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೈಗೊಂಡ ಕ್ರಮಗಳನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಟೀಕಿಸಿದ್ದಾರೆ. ಇಡೀ ವ್ಯವಸ್ಥೆ 'ಕೊಲೆಗಡುಕನಂತೆ' ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ರಾಹುಲ್, 'ಬಿಹಾರದಲ್ಲಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಎಕೆ-47 ರೈಫಲ್ ಬಳಸಿ ಗುಂಡು ಹಾರಿಸಲಾಗಿದೆ. ನೂರಾರು ವಿದ್ಯಾರ್ಥಿಗಳನ್ನು ಬಂಧಿಸಿ, ಎಫ್ಐಆರ್ಗಳನ್ನು ದಾಖಲಿಸಲಾಗಿದೆ ಎಂಬ ಸುದ್ದಿಗಳು ಕೇಳಿಬರುತ್ತಿವೆ' ಎಂದು ಆರೋಪಿಸಿದ್ದಾರೆ.
ಪ್ರಧಾನಿ ಮೋದಿ ಅವರು ಈಗಾಗಲೇ ನೀಡಿರುವ ಆಶ್ವಾಸನೆಯನ್ನು ಪ್ರಶ್ನಿಸಿರುವ ರಾಹುಲ್, 'ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸುವುದಿಲ್ಲ. ಎಲ್ಲರನ್ನೂ ಬಿಡುಗಡೆ ಮಾಡಲಾಗುತ್ತದೆ ಎಂಬ ನಿಮ್ಮ ಭರವಸೆ ಏನಾಯಿತು?' ಎಂದು ಕೇಳಿದ್ದಾರೆ.
'ವಿದ್ಯಾರ್ಥಿಗಳ ಮೇಲೆ ಕ್ರೂರವಾಗಿ ದಾಳಿ ನಡೆಸಲಾಗುತ್ತಿದೆ' ಎಂದು ಕಿಡಿಕಾರಿರುವ ಅವರು, 'ಮೋದಿ ಅವರು ಕ್ಷಮೆಯಾಚಿಸಬೇಕು' ಎಂದು ಒತ್ತಾಯಿಸಿದ್ದಾರೆ.
ದೆಹಲಿಯಲ್ಲಿ ಜುಲೈ 20ರಂದು ನಡೆದ 'ಸಂಸತ್ ಚಲೊ' ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಿ ದಾಳಿ ಮಾಡಲಾಗಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಕಾಂಗ್ರೆಸ್ ನಾಯಕ ರಾಹುಲ್, ಆ ವಿಚಾರವಾಗಿಯೂ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

