ನವದೆಹಲಿ: ಉಕ್ರೇನ್ ಕರಾವಳಿಯ ಬಳಿ ವಾಣಿಜ್ಯ ನೌಕೆಯೊಂದರ ಮೇಲೆ ನಡೆದ ಕ್ಷಿಪಣಿ ದಾಳಿಯಲ್ಲಿ ನಾಲ್ವರು ಭಾರತೀಯರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಭಾರತವು ಮಂಗಳವಾರ ರಷ್ಯಾದ ರಾಜತಾಂತ್ರಿಕರಿಗೆ ಸಮನ್ಸ್ ಜಾರಿಗೊಳಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ರವಿವಾರ ಉಕ್ರೇನ್ ನ ಒಡೆಸ್ಸಾ ಬಂದರಿನಿಂದ ಹೊರಡುತ್ತಿದ್ದ ಎಂವಿ ಗೋಲ್ಡನ್ ಲಿಯೋ ವಾಣಿಜ್ಯ ನೌಕೆಯ ಮೇಲೆ ನಡೆದ ದಾಳಿಯಲ್ಲಿ ನಾಲ್ವರು ಭಾರತೀಯ ಪ್ರಜೆಗಳು ಮೃತಪಟ್ಟಿದ್ದಾರೆ ಎಂದು ಭಾರತ ಸರ್ಕಾರ ದೃಢಪಡಿಸಿದೆ. ಮತ್ತೊಬ್ಬ ಭಾರತೀಯ ಸಿಬ್ಬಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸರ್ಕಾರದ ಮಾಹಿತಿ ಪ್ರಕಾರ, ದಾಳಿ ನಡೆದ ವೇಳೆ ನೌಕೆಯಲ್ಲಿ ಐವರು ಭಾರತೀಯರು ಸೇರಿದಂತೆ ಒಟ್ಟು 17 ಮಂದಿ ಸಿಬ್ಬಂದಿ ಇದ್ದರು.
ಘಟನೆಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ವಾಣಿಜ್ಯ ಹಡಗುಗಳು ಮತ್ತು ನಾಗರಿಕ ಸಿಬ್ಬಂದಿಯನ್ನು ಗುರಿಯಾಗಿಸಿ ದಾಳಿ ನಡೆಸುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿದೆ. ವಾಣಿಜ್ಯ ನೌಕೆಗಳನ್ನು ಗುರಿಯಾಗಿಸುವುದು ನಾಗರಿಕ ನಾವಿಕರ ಜೀವಕ್ಕೆ ಅಪಾಯ ಉಂಟುಮಾಡುವುದಲ್ಲದೆ, ಅಂತಾರಾಷ್ಟ್ರೀಯ ವ್ಯಾಪಾರಕ್ಕೆ ಅಡ್ಡಿಪಡಿಸಿ ನೌಕಾಯಾನದ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತದೆ ಎಂದು ತಿಳಿಸಿದೆ.
"ಲಭ್ಯವಿರುವ ಮಾಹಿತಿಯ ಪ್ರಕಾರ ನಾಲ್ವರು ಭಾರತೀಯ ಪ್ರಜೆಗಳು ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಕ್ರೇನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದು, ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ಒದಗಿಸಲು ಶ್ರಮಿಸುತ್ತಿದೆ" ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಮೃತರ ಪೈಕಿ ಒಬ್ಬರನ್ನು ಕೇರಳದ ಕಾಸರಗೋಡು ಜಿಲ್ಲೆಯ ವೆಳ್ಳರಿಕ್ಕುಂಡು ನಿವಾಸಿ, 26 ವರ್ಷದ ಮರ್ಚೆಂಟ್ ನೌಕಾ ಅಧಿಕಾರಿ ಅಖಿಲ್ ಜೊಯನ್ ಎಂದು ಗುರುತಿಸಲಾಗಿದೆ. ನೌಕಾ ಸಂಸ್ಥೆಯು ಸೋಮವಾರ ಇಮೇಲ್ ಮೂಲಕ ಅವರ ಕುಟುಂಬಕ್ಕೆ ಮಾಹಿತಿ ನೀಡಿ, ಮೃತಪಟ್ಟಿರುವುದನ್ನು ದೃಢಪಡಿಸಿದೆ. ಅಖಿಲ್ ಇತ್ತೀಚೆಗೆ ರಜೆಯ ಮೇಲೆ ಮನೆಗೆ ಬಂದಿದ್ದರು. ನಿಶ್ಚಿತಾರ್ಥವಾದ ಕೇವಲ ಒಂದು ತಿಂಗಳ ಬಳಿಕ ಅವರು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು.
10 ಮಂದಿ ಮೃತ್ಯು: ಉಕ್ರೇನ್
ಇದೇ ದಾಳಿಯ ಕುರಿತು ಉಕ್ರೇನ್ ಅಧಿಕಾರಿಗಳನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದ್ದು, ದಕ್ಷಿಣ ಉಕ್ರೇನ್ನ ಒಡೆಸ್ಸಾ ಬಂದರು ಸಮೀಪ ಮೆಕ್ಕೆಜೋಳವನ್ನು ಸಾಗಿಸುತ್ತಿದ್ದ ಹಡಗಿನ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಒಟ್ಟು 10 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.

