ನವದೆಹಲಿ: ದೇಶದಾದ್ಯಂತ ಸಂಚಲನ ಮೂಡಿಸಿರುವ ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಪರಿಸರ ಹೋರಾಟಗಾರ ಸೊನಮ್ ವಾಂಗ್ಚೂಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹವು 17ನೇ ದಿನಕ್ಕೆ ಕಾಲಿಟ್ಟಿದೆ.
ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜಂತರ್ ಮಂತರ್ನಲ್ಲಿ ಈ ಪ್ರತಿಭಟನೆ ನಡೆಯುತ್ತಿದೆ.
ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ವಾಂಗ್ಚೂಕ್, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನರ ಧ್ವನಿಗೆ ಕಿವಿಗೊಡಬೇಕು ಎಂದು ಮನವಿ ಮಾಡಿದರು.
ಕೇವಲ ಒಬ್ಬ ವ್ಯಕ್ತಿಯ ರಾಜೀನಾಮೆಯಿಂದ ಇಡೀ ಪರೀಕ್ಷಾ ವ್ಯವಸ್ಥೆ ಸುಧಾರಿಸಲು ಸಾಧ್ಯವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, 'ಕೇವಲ ರಾಜೀನಾಮೆಯಿಂದ ಎಲ್ಲವೂ ಬದಲಾಗುವುದಿಲ್ಲ ನಿಜ. ಆದರೆ ಇದು ವ್ಯವಸ್ಥೆಯಲ್ಲಿ ಹೊಣೆಗಾರಿಕೆಯನ್ನು ತರಲು ಮೊದಲ ಹೆಜ್ಜೆಯಾಗಲಿದೆ. ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳುವುದನ್ನು ನಿಲ್ಲಿಸದಿದ್ದರೆ ಇಂತಹ ಅಕ್ರಮಗಳು ಮುಂದುವರಿಯುತ್ತಲೇ ಇರುತ್ತವೆ. ಇದು ಕೇವಲ ಶಿಕ್ಷಣ ವ್ಯವಸ್ಥೆಯ ವೈಫಲ್ಯವಲ್ಲ, ಇಡೀ ಭಾರತೀಯ ಸಮಾಜಕ್ಕೆ ಹಿಡಿದ ಕೈಗನ್ನಡಿಯಾಗಿದೆ' ಎಂದರು.
ಮುಂದುವರಿದು ಮಾತನಾಡಿದ ಅವರು, 'ಪ್ರಶ್ನೆಪತ್ರಿಕೆ ಕದ್ದು ಪಾಸ್ ಆಗುವ ವೈದ್ಯರು ನಾಳೆ ನಮ್ಮ ಮಕ್ಕಳ ಪ್ರಾಣದ ಜೊತೆ ಆಟವಾಡುತ್ತಾರೆ. ಇಂತಹ ಎಂಜಿನಿಯರ್ಗಳು ಕಟ್ಟುವ ಕಟ್ಟಡಗಳು ಕುಸಿದು ಬಿದ್ದು ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಾರೆ. ಪ್ರಸ್ತುತ ದೇಶದಲ್ಲಿ ಪ್ರಾಮಾಣಿಕತೆಗೆ ಬೆಲೆಯೇ ಇಲ್ಲದಂತಾಗಿದೆ. ಮತದಿಂದ ಹಿಡಿದು ಪರೀಕ್ಷಾ ಪೇಪರ್ವರೆಗೆ ಎಲ್ಲವೂ ಮಾರಾಟಕ್ಕಿದೆ. ಇಂತಹ ಪರಿಸ್ಥಿತಿಯಲ್ಲಿ ನಾವು ಜಾಗತಿಕ ಮಟ್ಟದಲ್ಲಿ ತಲೆ ಎತ್ತಿ ನಿಲ್ಲಲು ಹೇಗೆ ಸಾಧ್ಯ' ಎಂದು ಕಳವಳ ವ್ಯಕ್ತಪಡಿಸಿದರು.

