ಲಖನೌ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ವಾರಾಣಸಿಯಲ್ಲಿ ನೂರಾರು ವಿದ್ಯಾರ್ಥಿಗಳು ಕಾಕ್ರೋಚ್ ಜನತಾ ಪಕ್ಷವನ್ನು (ಸಿಜೆಪಿ) ಬೆಂಬಲಿಸಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ಪರಿಸರ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರನ್ನು ಬೆಂಬಲಿಸಿ ಏಕಾಂಗಿಯಾಗಿ ಪ್ರತಿಭಟಿಸಿದ್ದ ಬರ್ಹೈಚ್ ಪಟ್ಟಣದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯರೊಬ್ಬರನ್ನು ಇತ್ತೀಚೆಗೆ ಅಮಾನತು ಮಾಡಲಾಗಿತ್ತು. ಆದರೂ, ವಿದ್ಯಾರ್ಥಿಗಳು ಧೃತಿಗೆಡದೆ ಬೀದಿಗಿಳಿದಿದ್ದಾರೆ.
ನೀಟ್-2026 ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿವಿಧ ಪರೀಕ್ಷೆಗಳ ಸಂದರ್ಭದಲ್ಲಿ ವರದಿಯಾದ ಲೋಪವನ್ನು ಖಂಡಿಸಿ, ದೆಹಲಿಯ ಜಂತರ್ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಿಜೆಪಿ, ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ವಜಾಕ್ಕೆ ಆಗ್ರಹಿಸಿದೆ. ಈ ಹೋರಾಟಕ್ಕೆ ಬೆಂಬಲ ಸೂಚಿಸಿ, ಬನಾರಸ್ ಹಿಂದೂ ವಿಶ್ವವಿದ್ಯಾಲಯ ಮತ್ತು ಮಹಾತ್ಮ ಗಾಂಧಿ ಕಾಶಿ ವಿದ್ಯಾಪೀಠದ ವಿದ್ಯಾರ್ಥಿಗಳು ತರಗತಿಯನ್ನು ಬಹಿಷ್ಕರಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ, ವಿಶ್ವವಿದ್ಯಾಲಯ ಹಾಗೂ ವಿದ್ಯಾಪೀಠದ ಸುತ್ತಲೂ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ವಿದ್ಯಾರ್ಥಿಗಳ ಸಮಾವೇಶದಲ್ಲಿ ಪಾಲ್ಗೊಂಡ ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್, 'ಸರ್ಕಾರವು ಯುವಕರಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳಿಂದಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಮೇಲಿನ ವಿಶ್ವಾಸಾರ್ಹತೆಯೂ ಕುಸಿದಿದೆ' ಎಂದಿದ್ದಾರೆ.
'ಪ್ರಧಾನ್ ಅವರು, ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ 'ನೈತಿಕ ಹೊಣೆ' ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸೋರಿಕೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು' ಎಂದು ಒತ್ತಾಯಿಸಿದ್ದಾರೆ.
ಜೂನ್ 20ರಿಂದ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಿಜೆಪಿ, ಇಂದು 'ಸಂಸತ್ ಚಲೊ' ಆಯೋಜಿಸಿತ್ತು. ಪ್ರತಿಭಟನಾಕಾರರನ್ನು ಚದುರಿಸಲು ದೆಹಲಿ ಪೊಲೀಸರು ಲಾಠಿ ಬೀಸಿದ್ದಾರೆ. ಅಶ್ರುವಾಯು ಶೆಲ್ಗಳನ್ನೂ ಪ್ರಯೋಗಿಸಿದ್ದಾರೆ.
ವೈದ್ಯರ ಅಮಾನತು
ಸಿಜೆಪಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಾಂಗ್ಚೂಕ್ ಅವರನ್ನು ಬೆಂಬಲಿಸಿ, ಬರ್ಹೈಚ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯ ರೂಪಕ್ ಇಖೆ ಎಂಬವರು ಏಕಾಂಗಿಯಾಗಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಮಹಾರಾಷ್ಟ್ರ ಮೂಲದ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇಖೆ ಅವರ ನಡೆಯನ್ನು ಅಶಿಸ್ತಿನ ಕೃತ್ಯ ಎಂದು ಆರೋಪಿಸಿ, ತನಿಖೆಗೆ ಸಮಿತಿಯನ್ನೂ ರಚಿಸಲಾಗಿದೆ.

