ನವದೆಹಲಿ: ನೀಟ್ ಪರೀಕ್ಷೆಯನ್ನು ಆನ್ಲೈನ್ನಲ್ಲಿ ನಡೆಸುವ ಕುರಿತು ಸರ್ಕಾರ ರಚಿಸಿರುವ ನಂದನ್ ನಿಲೇಕಣಿ ನೇತೃತ್ವದ ಉನ್ನತಾಧಿಕಾರ ಕಾರ್ಯಪಡೆಯ ಶಿಫಾರಸುಗಳನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.
ಪರೀಕ್ಷೆಯನ್ನು ಪೆನ್ನು-ಕಾಗದದ ಬದಲಾಗಿ ಕಂಪ್ಯೂಟರಿನಲ್ಲಿ ನಡೆಸುವಾಗ ಹೊಸ ಸುರಕ್ಷತಾ ಕ್ರಮಗಳ ಅಗತ್ಯವಿದೆ ಎಂದು ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ಅಲೋಕ್ ಅರಾಧೆ ಅವರ ಪೀಠವು ಅಭಿಪ್ರಾಯಪಟ್ಟಿದೆ.
'ಸೈಬರ್ ಸುರಕ್ಷತೆ ಮತ್ತು ಡೇಟಾಬೇಸ್ ರಕ್ಷಣೆಗೆ ಸಂಬಂಧಿಸಿದಂತೆ ಹೆಚ್ಚುವರಿ ಸುರಕ್ಷತಾ ಕ್ರಮಗಳ ಅಗತ್ಯವಿದೆ' ಎಂದು ಪೀಠ ತಿಳಿಸಿದೆ.
ನೀಟ್ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ ವಿಧಾನದಲ್ಲಿ ನಡೆಸಬೇಕೆಂದು ಕೋರಿ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಸಂಸದ ಸುಧಾಕರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
ಕೇಂದ್ರ ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಕೇಂದ್ರ ಸರ್ಕಾರವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ ಎಂದು ಪೀಠಕ್ಕೆ ತಿಳಿಸಿದರು.
'ಈ ಬಗ್ಗೆ ಖುದ್ದು ಪ್ರಧಾನ ಮಂತ್ರಿಯವರೇ ಘೋಷಣೆ ಮಾಡಿದ್ದು, ತಂತ್ರಜ್ಞಾನ ಕ್ಷೇತ್ರದ ತಜ್ಞರಾಗಿರುವ ನಂದನ್ ನಿಲೇಕಣಿ ಅವರು ಈ ಉನ್ನತ ಮಟ್ಟದ ಸಮಿತಿಯ ನೇತೃತ್ವ ವಹಿಸಿದ್ದಾರೆ' ಎಂದು ಅವರು ಹೇಳಿದರು.
'ನಿಲೇಕಣಿ ಅವರಲ್ಲದೆ, ಇಸ್ರೊದ ಮಾಜಿ ಅಧ್ಯಕ್ಷ ಎಸ್. ಸೋಮನಾಥ್, ಇಂಟೆಲಿಜೆನ್ಸ್ ಬ್ಯುರೊದ ಮಾಜಿ ನಿರ್ದೇಶಕ ತಪನ್ ದೇಕಾ, ಐಐಟಿ ಚೆನ್ನೈನ ನಿರ್ದೇಶಕ ವಿ. ಕಾಮಕೋಟಿ, ಮಾಜಿ ಶಿಕ್ಷಣ ಕಾರ್ಯದರ್ಶಿ ಅನಿತಾ ಕರ್ವಾಲ್ ಮತ್ತು ಲಾಜಿಸ್ಟಿಕ್ಸ್ ತಜ್ಞ ಅಮೃತ್ ಲಾಲ್ ಮೀನಾ ಅವರು ಈ ಕಾರ್ಯಪಡೆಯ ಇತರ ಸದಸ್ಯರಾಗಿದ್ದಾರೆ' ಎಂದು ಮೆಹ್ತಾ ತಿಳಿಸಿದರು.
ಮುಂದಿನ ವಿಚಾರಣೆಯನ್ನು ಆಗಸ್ಟ್ 3ಕ್ಕೆ ನಡೆಸುವುದಾಗಿ ಪೀಠ ತಿಳಿಸಿದೆ.
ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ವೈದ್ಯಕೀಯ ಪ್ರವೇಶಾತಿಗಾಗಿ ಮೇ 3 ರಂದು ನಡೆದಿದ್ದ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಜೂನ್ 21 ರಂದು ಮರು ಪರೀಕ್ಷೆ ನಡೆಸಲಾಗಿದೆ.

