ಚಂಡೀಗಢ: ಮಹೇಂದ್ರಗಢ ಜಿಲ್ಲೆಯ ಕನೀನಾದಲ್ಲಿರುವ ಸರಕಾರಿ ಶಾಲೆಯಲ್ಲಿ 15 ವಿದ್ಯಾರ್ಥಿನಿಯರ ತಂಡವೊಂದು ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಬೆಂಬಲಿಸಿ ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಆ ಶಾಲೆಯ ಪ್ರಾಂಶುಪಾಲರನ್ನು ಹರಿಯಾಣದ ಬಿಜೆಪಿ ನೇತೃತ್ವದ ಸರಕಾರ ಅಮಾನತುಗೊಳಿಸಿದೆ.
ಆದರೆ, ಸ್ಥಳೀಯರು ಪ್ರಾಂಶುಪಾಲರ ಬೆಂಬಲಕ್ಕೆ ನಿಂತಿದ್ದು, ಅವರ ಅಮಾನತನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.
ಮೂಲಗಳು ಪ್ರಕಾರ, ಕನೀನಾ ಮಂಡಿಯ ಸರಕಾರಿ ಸೀನಿಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರಾದ ನರೇಶ್ ಕೌಶಿಕ್ ಅವರನ್ನು ಅಮಾನತುಗೊಳಿಸಲಾಗಿದೆ. ಜುಲೈ 17ರಂದು ಶಾಲೆಯ ಹೊರಗೆ ಸೋನಮ್ ವಾಂಗ್ಚುಕ್ ಅವರಿಗೆ ಬೆಂಬಲ ಸೂಚಿಸುವ ಫಲಕಗಳನ್ನು ಹಿಡಿದುಕೊಂಡು ವಿದ್ಯಾರ್ಥಿನಿಯರು ನಡೆಸಿದ ಪ್ರತಿಭಟನೆಯ ಫೋಟೋ ಮತ್ತು ವೀಡಿಯೋಗಳು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ. ಹರಿಯಾಣ ನಾಗರಿಕ ಸೇವೆಗಳ (ಶಿಕ್ಷೆ ಮತ್ತು ಮೇಲ್ಮನವಿ) ನಿಯಮ, 2016ರ ನಿಬಂಧನೆ 5ರ ಅಡಿಯಲ್ಲಿ ಮಂಗಳವಾರ ಈ ಅಮಾನತು ಆದೇಶ ಹೊರಡಿಸಲಾಗಿದೆ.
ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಕನೀನಾ ಮಂಡಿಯ ಸರಕಾರಿ ಸೀನಿಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲ ನರೇಶ್ ಕೌಶಿಕ್, ''ಶಾಲೆಯ ಅವಧಿಯ ನಂತರ ''ಪ್ರತಿಭಟನೆ ನಡೆದಿದೆ. ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ'' ಎಂದು ಹೇಳಿದ್ದಾರೆ.
ಇದೇ ವೇಳೆ, ಕನೀನಾ ಮಂಡಿಯ ವಿವಿಧ ಸಾಮಾಜಿಕ ಸಂಘಟನೆಗಳ ಪ್ರತಿನಿಧಿಗಳು ಮತ್ತು ಇತರ ನಿವಾಸಿಗಳು ಪ್ರಾಂಶುಪಾಲರ ಅಮಾನತನ್ನು ಹಿಂಪಡೆಯುವಂತೆ ಕೋರಿದ್ದಾರೆ. ಪ್ರಾಂಶುಪಾಲರು ತಮ್ಮ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದಾರೆ. ಯಾವುದೇ ಆಕ್ಷೇಪಾರ್ಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.
ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿ ನೇತೃತ್ವದ ಸಮಿತಿ ವಿಚಾರಣೆ ನಡೆಸಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಹೇಳಿಕೆಗಳನ್ನು ದಾಖಲಿಸಿಕೊಂಡು ವರದಿ ಸಲ್ಲಿಸಿದೆ. ತಮಗೆ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿ ಪ್ರತಿಭಟನೆಗೆ ಅನುಮತಿ ನೀಡುವುದಿಲ್ಲ ಎಂದು ವಿದ್ಯಾರ್ಥಿಗಳಿಗೆ ಅನಿಸಿದ್ದರಿಂದ, ಅವರು ಶಾಲೆಯ ಅವಧಿಯ ನಂತರ ಪ್ರತಿಭಟನೆ ನಡೆಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ವಿದ್ಯಾರ್ಥಿಗಳು ತಮ್ಮ ತಪ್ಪಿಗೆ ಕ್ಷಮೆ ಯಾಚಿಸಿದ್ದು, ಭವಿಷ್ಯದಲ್ಲಿ ಇದನ್ನು ಪುನರಾವರ್ತಿಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಮೂಲಗಳ ಪ್ರಕಾರ, ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಪ್ರತಿಭಟನೆ ನಡೆಸಲು ಪ್ರಚೋದಿಸಿಲ್ಲ ಅಥವಾ ಬೆಂಬಲಿಸಿಲ್ಲ.

