ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ಎದುರಿಸಲು 'ಇಂಡಿಯಾ' ಮೈತ್ರಿಕೂಟದಡಿ ಕಾಂಗ್ರೆಸ್, ಸಿಪಿಐ(ಎಂ) ಸೇರಿದಂತೆ ಎಲ್ಲ ವಿರೋಧ ಪಕ್ಷಗಳು ಒಟ್ಟಾಗಬೇಕು ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಕರೆ ನೀಡಿದ್ದಾರೆ.
ಮಂಗಳವಾರ ನಡೆದ ಟಿಎಂಸಿಯ ವಾರ್ಷಿಕ ಹುತಾತ್ಮರ ದಿನದ ಸಮಾವೇಶದಲ್ಲಿ ಮಾತನಾಡಿದ ಅವರು, 'ಬಿಜೆಪಿ ವಿರುದ್ಧ ಹೋರಾಡಲು ಇಂಡಿಯಾ ಮೈತ್ರಿಕೂಟದಡಿ ಎಲ್ಲರೂ ಒಂದಾಗಬೇಕು. ನನಗೆ ಯಾವುದೇ ಅಹಂಕಾರ ಇಲ್ಲ. ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಟ್ಟಾಗಿ ಹೋರಾಡೋಣ' ಎಂದು ಹೇಳಿದ್ದಾರೆ.
ಪಕ್ಷ ತೊರೆದು ಹೋದವರನ್ನು ಮತ್ತೆ ಸೇರಿಸಿಕೊಳ್ಳುವುದಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದ ಅವರು, 'ದ್ರೋಹಿಗಳಿಗೆ ಪಕ್ಷದಲ್ಲಿ ಸ್ಥಾನವಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ವಿರುದ್ಧ ಹೋರಾಟ ನಡೆಸುತ್ತಿರುವ ಎಲ್ಲ ಪಕ್ಷಗಳು ಒಗ್ಗಟ್ಟಾಗಬೇಕು ಎಂದು ಮನವಿ ಮಾಡಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, 'ಟಿಎಂಸಿಯಲ್ಲಿ 10 ವರ್ಷ ಇದ್ದಾಗ ಅವರು ಏನು ಮಾಡಿದರು ಎಂಬುದನ್ನು ನಾನು ಬಹಿರಂಗಪಡಿಸಬಲ್ಲೆ. ನಾನು ಬಾಯಿ ತೆರೆದರೆ ಅವರ ಮುಖವಾಡ ಕಳಚಿಬೀಳಲಿದೆ' ಎಂದು ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳು ಮತ್ತು ಪೊಲೀಸರನ್ನು ವಿರೋಧ ಪಕ್ಷಗಳ ವಿರುದ್ಧ ಬಳಸುತ್ತಿದೆ ಎಂದು ಆರೋಪಿಸಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಟಿಎಂಸಿ ನಾಯಕರು ಹಾಗೂ ಕಾರ್ಯಕರ್ತರ ವಿರುದ್ಧ ಸುಮಾರು 14 ಸಾವಿರ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಲು ತೆರಳಿದ್ದ ವೇಳೆ ತಮ್ಮನ್ನು ಗೃಹಬಂಧನದಂತೆಯೇ ನಿಗಾದಲ್ಲಿರಿಸಲಾಗಿತ್ತು ಎಂದು ಮಮತಾ ಆರೋಪಿಸಿದ್ದಾರೆ.
ಟಿಎಂಸಿಯ ಹುತಾತ್ಮರ ದಿನದ ಸಮಾವೇಶವನ್ನು ಹಾಳು ಮಾಡಲು ಬಿಜೆಪಿ ಕಾರ್ಯಕರ್ತರು ವೇದಿಕೆ ಧ್ವಂಸಗೊಳಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಯತ್ನಿಸಿದ್ದರು ಎಂದು ಹೇಳಿದ್ದಾರೆ. ಆದರೆ, ಸಮಾವೇಶಕ್ಕೆ ಅನುಮತಿ ನೀಡಿದ ಕಲ್ಕತ್ತಾ ಹೈಕೋರ್ಟ್ಗೆ ಕೃತಜ್ಞತೆ ಸಲ್ಲಿಸಿದರು.
ಪರೀಕ್ಷಾ ಅಕ್ರಮಗಳ ವಿಚಾರ ಪ್ರಸ್ತಾಪಿಸಿದ ಮಮತಾ, ಅಗತ್ಯವಿದ್ದರೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುವ ಪ್ರತಿಭಟನೆಯಲ್ಲೂ ಭಾಗವಹಿಸುವುದಾಗಿ ಘೋಷಿಸಿದರು.

