ನವದೆಹಲಿ: ಕೇರಳದ ವಯನಾಡಿನ ಕಲ್ಲಾಡಿ ಎಂಬಲ್ಲಿ ಸಂಭವಿಸಿರುವ ಭೂಕುಸಿತದ ಘಟನೆ ಅತ್ಯಂತ ದುಃಖಕರ ಸಂಗತಿ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 'ಭೂಕುಸಿತದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ.
ದುರಂತದಲ್ಲಿ ಪ್ರಾಣ ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಮಣ್ಣಿನಡಿ ಸಿಲುಕಿರುವವರನ್ನು ರಕ್ಷಿಸಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಬೇಕು. ಕಾಂಗ್ರೆಸ್ ಮತ್ತು ಯುಡಿಎಫ್ ಕಾರ್ಯಕರ್ತರು ತಕ್ಷಣವೇ ಸಂತ್ರಸ್ತರ ನೆರವಿಗೆ ಧಾವಿಸಬೇಕು' ಎಂದು ಮನವಿ ಮಾಡಿದ್ದಾರೆ.
ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸಹ ಪ್ರತಿಕ್ರಿಯಿಸಿದ್ದು, ಘಟನೆಗೆ ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಸಿಲುಕಿರುವವರ ರಕ್ಷಣೆಗೆ ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ. ಎನ್ಡಿಆರ್ಎಫ್, ಎಸ್ಡಿಆರ್ಎಫ್ ಮತ್ತು ನಾಗರಿಕ ರಕ್ಷಣಾ ಸ್ವಯಂಸೇವಕರು ಸ್ಥಳದಲ್ಲಿ ಬೀಡು ಬಿಟ್ಟಿದೆ. ಜಿಲ್ಲಾಡಳಿತದೊಂದಿಗೆ ನಿರಂತರ ಸಮನ್ವಯ ಸಾಧಿಸಲಾಗುತ್ತಿದೆ. ರಕ್ಷಣಾ ಕಾರ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ಸಾರ್ವಜನಿಕರು ಆಡಳಿತ ಮಂಡಳಿಯ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಅವರು ಕೋರಿದ್ದಾರೆ.
ಐವರ ಸಾವು, ಏಳು ಮಂದಿ ನಾಪತ್ತೆ
ಕೋಝಿಕ್ಕೋಡ್ ಮತ್ತು ವಯನಾಡು ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ಮಾರ್ಗ ಯೋಜನೆಯ ಕಾಮಗಾರಿ ನಡೆಯುತ್ತಿದ್ದ ಕಲ್ಲಾಡಿಯ ಮೀನಾಕ್ಷಿ ಸೇತುವೆಯ ಬಳಿ ಈ ಭೂಕುಸಿತ ಸಂಭವಿಸಿದೆ. ಈ ದುರಂತದಲ್ಲಿ ಐವರು ಮೃತಪಟ್ಟಿದ್ದು, ಏಳು ಜನರು ಗಾಯಗೊಂಡಿದ್ದಾರೆ. ಇತರ ಏಳು ಮಂದಿ ನಾಪತ್ತೆಯಾಗಿದ್ದಾರೆ. ಮುಖ್ಯಮಂತ್ರಿಗಳು ಖುದ್ದಾಗಿ ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

