ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ(89) ಅವರು ವಯೋಸಹಜ ಅನಾರೋಗ್ಯ ಕಾರಣದಿಂದಾಗಿ ಶನಿವಾರ ಸಂಜೆ ನಿಧನರಾಗಿದ್ದಾರೆ.
ಇತ್ತೀಚಿಗೆ ಚೆನ್ನಮ್ಮ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಿ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆರಂಭದಲ್ಲಿ ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬರುವ ನಿರೀಕ್ಷೆಯಿದೆ ಎಂದು ಕುಟುಂಬದವರು ತಿಳಿಸಿದ್ದರು. ಆದರೆ ಆರೋಗ್ಯ ಸ್ಥಿತಿ ಹದಗೆಟ್ಟ ಪರಿಣಾಮ ಶನಿವಾರ ಸಂಜೆ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಸುಮಾರು 25 ದಿನ ಚಿಕಿತ್ಸೆ ಪಡೆದುಕೊಂಡು ಮನೆಗೆ ಹಿಂದಿರುಗಿದ್ದರು. ಜುಲೈ 15ರಂದು ಮತ್ತೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅವರ ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.
1954ರಲ್ಲಿ ಚೆನ್ನಮ್ಮ ಅವರು ಎಚ್.ಡಿ.ದೇವೇಗೌಡರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಆರು ಮಂದಿ ಮಕ್ಕಳಿದ್ದು, ರಾಜಕೀಯ-ವೈದ್ಯಕೀಯ ಸೇರಿ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಮಾಜಿ ಸಚಿವ ಎಚ್.ಡಿ.ರೇವಣ್ಣ (ಹಿರಿಯ ಮಗ), ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (ಎರಡನೆ ಮಗ), ಎಚ್.ಡಿ.ಬಾಲಕೃಷ್ಣ (ಮೂರನೆ ಮಗ), ಎಚ್.ಡಿ.ರಮೇಶ್ (ನಾಲ್ಕನೇ ಮಗ) ಎಚ್.ಡಿ.ಅನುಸೂಯಾ (ಮಗಳು), ಎಚ್.ಡಿ.ಶೈಲಜಾ (ಮಗಳು) ಅವರನ್ನು ಚೆನ್ನಮ್ಮ ಅಗಲಿದ್ದಾರೆ.
ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ಕುಟುಂಬದ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿ ಪಾರ್ಥೀವ ಶರೀದರ ಅಂತಿಮ ದರ್ಶನ ಪಡೆದರು.
ಗಣ್ಯರ ಸಂತಾಪ:
ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ, ಯು.ಟಿ. ಖಾದರ್, ಕೆ.ಎಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು, ಚಿತ್ರರಂಗದ ಕಲಾವಿದರು ಸಂತಾಪ ಸೂಚಿಸಿದ್ದಾರೆ.
ಪುತ್ರರ ಕಂಬನಿ:
ಚೆನ್ನಮ್ಮ ಅವರು ನಿಧನರಾಗಿದ್ದಾರೆ ಎಂದು ವೈದ್ಯರು ಅಧಿಕೃತವಾಗಿ ಘೋಷಣೆ ಮಾಡುತ್ತಿದ್ದಂತೆ ಆಸ್ಪತ್ರೆಯಲ್ಲಿದ್ದ ಪುತ್ರರು ಮತ್ತು ಪುತ್ರಿಯರು ತಮ್ಮ ತಾಯಿಯನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ ದೃಶ್ಯ ಕಂಡಿತು.
ಚೆನ್ನಮ್ಮ ಸರಳತೆ: ಎಚ್.ಡಿ.ದೇವೇಗೌಡ ಅವರು ಕರ್ನಾಟಕದ ಸಿಎಂ ಆಗಿ, ನಂತರ ದೇಶದ ಪ್ರಧಾನಿಯಾಗಿ ಉನ್ನತ ಹುದ್ದೆಗಳನ್ನು ಅಲಂಕರಿಸಿದರೂ, ಅವರ ಮನೆಯಲ್ಲಿನ ಸರಳತೆಯನ್ನು ಕಾಯ್ದುಕೊಳ್ಳುವಲ್ಲಿ ಚೆನ್ನಮ್ಮನವರ ಪಾತ್ರ ಹಿರಿದು. ಸಂಸಾರಿಕ ಬದ್ಧತೆ ಮತ್ತು ಮೌಲ್ಯಗಳಿಗೇ ಅವರು ಹೆಚ್ಚಿನ ಆದ್ಯತೆ ನೀಡಿದ್ದರು. ರಾಜಕೀಯದ ಗದ್ದಲಗಳ ನಡುವೆಯೂ ಕುಟುಂಬವನ್ನು ಭದ್ರವಾಗಿ ಹಿಡಿದಿಟ್ಟುಕೊಂಡಿದ್ದರು.
ಚೆನ್ನಮ್ಮ ಮೇಲೆ ಆಯಸಿಡ್ ದಾಳಿ: ಚೆನ್ನಮ್ಮ ಮೇಲೆ ಕೌಟುಂಬಿಕ ಕಲಹದ ಹಿನ್ನೆಲೆ ಸಂಬಂಧಿಯೇ 2001ರಲ್ಲಿ ಆಯಸಿಡ್ ದಾಳಿ ಮಾಡಿದ್ದ. 2001ರ ಫೆಬ್ರವರಿ 21ರಂದು ಚೆನ್ನಮ್ಮ ಅವರು ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿನ ಈಶ್ವರ ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅವರ ಮೇಲೆ ಆಯಸಿಡ್ ದಾಳಿಯಾಗಿತ್ತು.
ಮಹಾಶಿವರಾತ್ರಿ ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು. ಚೆನ್ನಮ್ಮ ಎಸ್ಸೆಸ್ಸೆಲ್ಸಿಯ ವರೆಗೆ ಶಿಕ್ಷಣ ಪೂರೈಸಿದ್ದರು.

