ನವದೆಹಲಿ: ಸುಪ್ರೀಂ ಕೋರ್ಟ್ ವಿಚಾರಣೆಯ ವೇಳೆ ಅರ್ಜಿಯೊಂದರ ಕಲಾಪಕ್ಕೆ ಅಡ್ಡಿಪಡಿಸಿ, ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಬಂಧಿತರನ್ನು ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ನಿವಾಸಿಯಾದ ಲಕ್ನೋ ವಿಶ್ವವಿದ್ಯಾಲಯದ ಮೂರನೇ ವರ್ಷದ ಎಲ್ಎಲ್ಬಿ ವಿದ್ಯಾರ್ಥಿ ಪ್ರಬಲ್ ಪ್ರತಾಪ್ ಸಿಂಗ್ ಮತ್ತು ರಾಯ್ಬರೇಲಿಯ ಎರಡನೇ ವರ್ಷದ ಕಾನೂನು ವಿದ್ಯಾರ್ಥಿ ಚಂದರ್ ಭಾನ್ ಎಂದು ಗುರುತಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯದ ಒಳಗೆ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಇಬ್ಬರನ್ನೂ ವಶಕ್ಕೆ ಪಡೆಯಲಾಗಿದೆ ಎಂದು ದಿಲ್ಲಿ ಪೊಲೀಸರು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ಭದ್ರತಾ ಸಿಬ್ಬಂದಿ ನೀಡಿದ ದೂರಿನ ಆಧಾರದ ಮೇಲೆ, ತಿಲಕ್ ಮಾರ್ಗ್ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಇದರಲ್ಲಿ ನ್ಯಾಯಾಲಯದ ಕಲಾಪಗಳಿಗೆ ಅಡ್ಡಿಪಡಿಸುವುದು, ಸಾರ್ವಜನಿಕ ಸೇವಕನ ಮೇಲೆ ಹಲ್ಲೆ ಮತ್ತು ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪಗಳು ಸೇರಿವೆ.
ಜುಲೈ 10 ರಂದು ಪ್ರಬಲ್ ಪ್ರತಾಪ್ ಸಿಂಗ್ ಸುಪ್ರೀಂ ಕೋರ್ಟ್ ಮುಂದೆ ಖುದ್ದಾಗಿ ಹಾಜರಾಗಿದ್ದಾಗ ಈ ಘಟನೆ ನಡೆದಿದೆ. ವಿಚಾರಣೆಯ ಸಂದರ್ಭದಲ್ಲಿ, ಆತ ಭಾರತದ ಮುಖ್ಯ ನ್ಯಾಯಾಧೀಶರ ವಿರುದ್ಧ ಅವಾಚ್ಯ ಮತ್ತು ಆಕ್ಷೇಪಾರ್ಹ ಪದಗಳನ್ನು ಬಳಸಲು ಪ್ರಾರಂಭಿಸಿದ್ದಲ್ಲದೆ, ಕೋರ್ಟ್ ರೂಮ್ ನೊಳಗೆ ಪೇಪರ್ ಗಳನ್ನು ತೂರಿ ನ್ಯಾಯಾಂಗ ಕಲಾಪಗಳಿಗೆ ಅಡ್ಡಿಪಡಿಸುವ ಮೂಲಕ ಗದ್ದಲ ಎಬ್ಬಿಸಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಶಿಸ್ತು ಕಾಪಾಡಲು ಮತ್ತು ಆತನನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿದಾಗ, ಸಿಂಗ್ ಅಧಿಕಾರಿಗಳಲ್ಲಿ ಒಬ್ಬರನ್ನು ತಳ್ಳಿ, ಅವರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಕಲಾಪಕ್ಕೆ ಅಡ್ಡಿಪಡಿಸಿದ ಹೊರತಾಗಿಯೂ, ಸುಪ್ರೀಂ ಕೋರ್ಟ್ ಆರೋಪಿಯ ವಿರುದ್ಧ ಯಾವುದೇ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಆರಂಭಿಸದಿರಲು ಅಥವಾ ಯಾವುದೇ ಬಲವಂತದ ಕ್ರಮವನ್ನು ಕೈಗೊಳ್ಳದಿರಲು ನಿರ್ಧರಿಸಿತ್ತು. ಆತ ತೀವ್ರವಾಗಿ ತೊಂದರೆಗೊಳಗಾಗಿದ್ದಾನೆ. ಇದೆಲ್ಲವೂ ಹತಾಶೆಯಾಗಿದೆ. ನಮಗೆ ಆತನ ಬಗ್ಗೆ ಸಹಾನುಭೂತಿ ಮಾತ್ರ ಇದೆ" ಎಂದು ನ್ಯಾಯಾಲಯವು ಹೇಳಿಕೆ ನೀಡಿತ್ತು.
"ಘಟನೆಯನ್ನು ನಿರ್ಲಕ್ಷಿಸಿ. ಯುವಕರು ಕೆಲವೊಮ್ಮೆ ಇಂತಹ ಕೆಲಸಗಳನ್ನು ಮಾಡುತ್ತಾರೆ," ಎಂದು ಮುಖ್ಯನ್ಯಾಯಮೂರ್ತಿ ಸೂರ್ಯಕಾಂತ್ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದರು.
ಆರೋಪಿಗಳ ಸ್ಥಿತಿಯ ಬಗ್ಗೆ ಸುಪ್ರೀಂ ಕೋರ್ಟ್ ಉಲ್ಲೇಖಿಸಿದ ಬಳಿಕ, ಇಬ್ಬರೂ ಆರೋಪಿಗಳನ್ನು ವೈದ್ಯಕೀಯ ತಪಾಸಣೆಗಾಗಿ ಇನ್ಸ್ಟಿಟ್ಯೂಟ್ ಆಫ್ ಹ್ಯೂಮನ್ ಬಿಹೇವಿಯರ್ ಅಂಡ್ ಅಲೈಡ್ ಸೈನ್ಸಸ್ ಸಂಸ್ಥೆಗೆ ಕಳುಹಿಸಲಾಗಿತ್ತು. ಇಬ್ಬರೂ ವ್ಯಕ್ತಿಗಳು ಮಾನಸಿಕವಾಗಿ ಸ್ವಸ್ಥರಾಗಿದ್ದಾರೆ ಎಂದು ವೈದ್ಯರು ವರದಿ ನೀಡಿರುವುದಾಗಿ ಪೋಲೀಸರು ತಿಳಿಸಿದ್ದಾರೆ.
ತನಿಖೆಯ ಸಂದರ್ಭದಲ್ಲಿ, ಪೊಲೀಸರು ಅವರ ವಶದಲ್ಲಿದ್ದ ಆಕ್ಷೇಪಾರ್ಹ ವಿಷಯಗಳನ್ನು ಒಳಗೊಂಡಿದ್ದ ಕರಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸುಪ್ರೀಂ ಕೋರ್ಟ್ ಭದ್ರತಾ ಸಿಬ್ಬಂದಿಯೊಬ್ಬರ ದೂರಿನ ಮೇರೆಗೆ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 132, 221, 224 ಮತ್ತು 3(5) ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಬಂಧನದ ನಂತರ ಇಬ್ಬರನ್ನೂ ದೆಹಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಕೋರ್ಟ್ ರೂಮ್ನಲ್ಲಿ ನಡೆದ ಈ ಗದ್ದಲವು ಮುಂಚಿತವಾಗಿಯೇ ಯೋಜಿತವಾಗಿದ್ದೇ ಅಥವಾ ದೊಡ್ಡ ಪಿತೂರಿಯ ಭಾಗವೇ ಎಂಬುದನ್ನು ತನಿಖಾಧಿಕಾರಿಗಳು ಈಗ ಪರಿಶೀಲಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

