ಡೆಹರಾಡೂನ್: ಉತ್ತರಾಖಂಡ್ನ ಬದರಿನಾಥ ದೇಗುಲದ ಕಾಣಿಕೆ ದುರ್ಬಳಕೆ ಆರೋಪದ ಮೇಲೆ ಅಮಾನತುಗೊಂಡಿರುವ ಸಿಬ್ಬಂದಿಯೊಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಬದರಿನಾಥ-ಕೇದಾರನಾಥ ದೇಗುಲ ಸಮಿತಿಯ (ಬಿಕೆಟಿಸಿ) ಮುಖ್ಯಸ್ಥರ ಖಾಸಗಿ ಕಾರ್ಯದರ್ಶಿಯಾಗಿದ್ದ ಪ್ರಮೋದ್ ನೌತಿಯಾಲ್ ವಿರುದ್ಧ ಮಂಗಳವಾರ ಎಫ್ಐಆರ್ ದಾಖಲಿಸಲಾಗಿದೆ.
ನಾಲ್ವರು ಸದಸ್ಯರ ತನಿಖಾ ಸಮಿತಿಯ ಪ್ರಾಥಮಿಕ ಪರಿಶೀಲನೆ ವೇಳೆ ದುರ್ಬಳಕೆ ನಿಜವೆಂದು ಕಂಡುಬಂದಿದ್ದರಿಂದ ಪ್ರಮೋದ್ ಅವರನ್ನು ಅಮಾನತು ಮಾಡಲಾಗಿತ್ತು.
ಪ್ರಮೋದ್ ಅವರ ವಿರುದ್ಧ ಬದರಿನಾಥ ಪೊಲೀಸ್ ಠಾಣೆಯಲ್ಲಿ ಕಳವು ಮತ್ತು ನಂಬಿಕೆ ದ್ರೋಹದ ಕ್ರಿಮಿನಲ್ ಅಪರಾಧದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಉತ್ತರಾಖಂಡ ಸರ್ಕಾರ ಗರ್ವಾಲ್ ವಿಭಾಗದ ಆಯುಕ್ತರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಿದ್ದು, 15 ದಿನಗಳಲ್ಲಿ ವರದಿ ನೀಡಲು ಸೂಚಿಸಲಾಗಿದೆ.
ಬದರಿನಾಥ ದೇಗುಲದ ಕಾಣಿಕೆ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿಗಳು ಹರಿದಾಡಿದ್ದವು. ಈ ಬಗ್ಗೆ ತನಿಖೆಗೆ ಆಗ್ರಹಿಸಿ 'ಭೈರವ್ ಸೇನಾ' ಸಂಘಟನೆ ದೂರು ನೀಡಿದೆ ಎಂದು ಎಫ್ಐಆರ್ನಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ.

