ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ಬಾಂಬ್ ಇರಿಸಿರುವ ಬಗ್ಗೆ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ಮಾಹಿತಿ ಬಂದ ಕೂಡಲೇ ದೆಹಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆದರೂ, ಆವರಣದಲ್ಲಿ ವ್ಯಾಪಕ ಶೋಧ ನಡೆಸಿದ ನಂತರ ಇದೊಂದು ಹುಸಿ ಕರೆ ಎಂದು ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಬೆದರಿಕೆ ಕರೆ ಮಾಡಲಾಗಿದ್ದು, ದೆಹಲಿಯಲ್ಲಿರುವ ಐತಿಹಾಸಿಕ ಸ್ಮಾರಕವನ್ನು ಸ್ಫೋಟಿಸಲಾಗುವುದು ಎಂದು ಕರೆ ಮಾಡಿದವರು ಹೇಳಿದ್ದರು. ಮುಂಬೈ ಪೊಲೀಸರು ತಕ್ಷಣ ದೆಹಲಿ ಪೊಲೀಸ್ ನಿಯಂತ್ರಣ ಕೊಠಡಿಯೊಂದಿಗೆ ಮಾಹಿತಿ ಹಂಚಿಕೊಂಡರು. ಬಳಿಕ, ಜಿಲ್ಲಾ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಂಬೈ ಪೊಲೀಸರ ಮಾಹಿತಿ ನಂತರ, ಕೆಂಪು ಕೋಟೆ ಮತ್ತು ಸುತ್ತಮುತ್ತ ಭದ್ರತೆಯನ್ನು ಬಿಗಿಗೊಳಿಸಲಾಯಿತು. ಸ್ಮಾರಕ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಪೂರ್ಣ ಶೋಧ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.
ವ್ಯಾಪಕ ಹುಡುಕಾಟದ ನಂತರ, ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಇದೊಂದು ಹುಸಿ ಬೆದರಿಕೆ ಎಂದು ಘೋಷಿಸಲಾಗಿದೆ ಎಂದಿದ್ದಾರೆ.
ಕರೆ ಮಾಡಿದವರನ್ನು ಪತ್ತೆ ಮಾಡಲು ಮತ್ತು ಹುಸಿ ಬೆದರಿಕೆ ಹಾಕಿರುವುದರ ಹಿಂದಿನ ಉದ್ದೇಶ ಕಂಡುಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ.

