ನವದೆಹಲಿ: 'ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ವಿದ್ಯಾರ್ಥಿಗಳನ್ನು ರಾಜಕೀಯ ದಾಳವನ್ನಾಗಿ ಮಾಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಆರೋಪ ಮಾಡಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಸಂಸತ್ ಚಲೋ ನಡೆಸಿದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ಜುಲೈ 20ರಂದು ಹಲ್ಲೆ ನಡೆಸಿದ್ದರು.
ಹಲ್ಲೆ ಹಾಗೂ ಪೊಲೀಸ್ ದೌರ್ಜನ್ಯ ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಬಳಿ ಮಂಗಳವಾರ ಧರಣಿ ನಡೆಸಿದ್ದರು.
ಈ ಪ್ರತಿಭಟನೆಗೆ ಸಂಬಂಧಿಸಿ ಮೊದಲ ಪ್ರತಿಕ್ರಿಯೆ ನೀಡಿರುವ ಧರ್ಮೇಂದ್ರ ಪ್ರಧಾನ್, ಸಂಸತ್ನಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನಕ್ಕೆ ಅಡ್ಡಿಯುಂಟು ಮಾಡುವ ಉದ್ದೇಶದಿಂದ ರಾಹುಲ್ ಗಾಂಧಿ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಅಲ್ಲದೆ, ಪ್ರಧಾನಿ ಮೋದಿ ಅವರ ಮನೆಯ ಮುಂಭಾಗ ಧರಣಿ ನಡೆಸಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದಲ್ಲದೆ, ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ವಿದ್ಯಾರ್ಥಿಗಳ ಜೊತೆ ಚರ್ಚೆ ಬಗ್ಗೆ ತಿಳಿಸಿದ ನಂತರವೂ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುವುದು ಅವರಿಗೆ ಬೇಕಿಲ್ಲ. ಅಧಿವೇಶನಕ್ಕೆ ಅಡ್ಡಿಪಡಿಸುವುದು ಅವರ ಮುಖ್ಯಉದ್ದೇಶವಾಗಿದೆ ಎಂದು ಟೀಕೆ ಮಾಡಿದ್ದಾರೆ.

