ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು 'ಕಠಿಣ ಶಿಕ್ಷೆ ವಿಧಿಸುವ ಕರಡು ಮಸೂದೆ'ಗೆ ಶುಕ್ರವಾರ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಂಸತ್ ಭವನದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವವರಿಗೆ ಈಗ ಚಾಲ್ತಿಯಲ್ಲಿರುವ ಕಾನೂನುಗಳಿಗಿಂತಲೂ ಕಠಿಣ ಶಿಕ್ಷೆ ವಿಧಿಸುವ ಕರಡು ಮಸೂದೆಯನ್ನು ಅನುಮೋದಿಸಿರುವುದಾಗಿ ಮೂಲಗಳು ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.
ಗುರುವಾರ ಮಧ್ಯರಾತ್ರಿ ಸುಮಾರಿಗೆ ವಿಡಿಯೊ ಸಂದೇಶ ಒಂದನ್ನು ರವಾನಿಸಿದ್ದ ನರೇಂದ್ರ ಮೋದಿ, ಪ್ರಶ್ನೆ ಪತ್ರಿಕೆ ಸೋರಿಕೆಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ನಿಬಂಧನೆಗಳನ್ನು ಒಳಗೊಂಡಿರುವ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದ್ದರು.
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ, ಪರೀಕ್ಷಾ ಅಕ್ರಮಗಳಿಗೆ ಹೊಣೆಗಾರಿಕೆ ತೆಗೆದುಕೊಳ್ಳುವುದು, ಶಿಕ್ಷಣ ವ್ಯವಸ್ಥೆಯಲ್ಲಿನ ಸುಧಾರಣೆಗಳು ಮತ್ತು ಮೇ ತಿಂಗಳಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ಬಳಿಕ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡುವಂತೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯ ನಡುವೆ ಈ ಘೋಷಣೆ ಹೊರಬಿದ್ದಿದೆ.

