ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅದಕ್ಕೆ ಸಂಬಂಧಿಸಿದ ಇತರ ವಿಚಾರಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಲು ಸಿದ್ಧವಿರುವುದಾಗಿ ತಿಳಿಸಿದರೂ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಧರಣಿ ಮುಂದುವರಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಆರೋಪಿಸಿದೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಹೊರಗೆ ಧರಣಿ ಆರಂಭಿಸುತ್ತಿದ್ದಂತೆ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಗೃಹ ಕಾರ್ಯದರ್ಶಿ ಗೋವಿಂದ ಮೋಹನ್ ಅವರೊಂದಿಗೆ ತೆರಳಿ ಭೇಟಿಯಾದರು. ಸರ್ಕಾರವು, ಪ್ರಸ್ತುತ ವಿದ್ಯಮಾನಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಲಿದೆ. ಧರಣಿಯನ್ನು ಅಂತ್ಯಗೊಳಿಸಿ ಎಂದು ಮನವಿ ಮಾಡಿದ್ದರು. ಆದರೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ರಾಹುಲ್ ಪಟ್ಟು ಹಿಡಿದಿದ್ದಾರೆ.
ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಜಿತೇಂದ್ರ ಸಿಂಗ್, 'ರಾಹುಲ್ ಅವರು ತಮ್ಮ ಹಿಂದಿನ ಬೇಡಿಕೆಯಿಂದಲೇ ಹಿಂದೆ ಸರಿದಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ಸ್ಥಾನದಲ್ಲಿರುವವರಿಗೆ ಇದು ಶೋಭೆ ತರುವುದಿಲ್ಲ' ಎಂದಿದ್ದಾರೆ.
'ರಾಹುಲ್ ಅವರಂತಹ ನಾಯಕರು ತಮ್ಮ ಮಾತಿನಿಂದಲೇ ಹಿಂದೆ ಸರಿಯುವುದು ದುರದೃಷ್ಟಕರ' ಎಂದು ಆರೋಪಿಸಿದ್ದಾರೆ.
'ನೀಟ್ ಹಾಗೂ ಅದಕ್ಕೆ ಸಂಬಂಧಿಸಿದ ಪ್ರತಿಭಟನೆ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆಯೂ ಸಂಸತ್ತಿನಲ್ಲಿ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ. ರಾಹುಲ್ ಗಾಂಧಿಯ ವರ್ತನೆಯು ಪ್ರಜಾಪ್ರಭುತ್ವದ ನಿಯಮಗಳಿಗೆ ಹೊಂದಿಕೆಯಾಗುವುದಿಲ್ಲ' ಎಂದು ದೂರಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಅನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆಗೆ ಧುಮುಕಿದ್ದಾರೆ. ರಾಹುಲ್ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಪ್ರಧಾನಿ ನಿವಾಸದ ಎದುರು ಧರಣಿ ಕುಳಿತಿದ್ದಾರೆ.

