ನವದೆಹಲಿ: ಭಾರತದ ಶಿಕ್ಷಣ ವ್ಯವಸ್ಥೆಯು ಇತ್ತೀಚೆಗೆ 'ಅಪ್ರಮಾಣಿಕ ಬಲವಂತದ ವಸೂಲಿ'ಯಾಗಿ ಬದಲಾಗಿದೆ. ಅದನ್ನು ಸರಿಪಡಿಸಲು ಇದು ಸರಿಯಾದ ಸಮಯವಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.
ನೀಟ್ ಅಕ್ರಮ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡುವ ಉದ್ದೇಶದಿಂದ ಜುಲೈ 17ರಂದು ಕಾಂಗ್ರೆಸ್ ಹಮ್ಮಿಕೊಂಡಿರುವ 'ಛಾತ್ರೋಂ ಕಿ ಗೂಂಜ್'ನ ಎರಡನೇ ಕಾರ್ಯಕ್ರಮಕ್ಕೂ ಮುನ್ನ ರಾಹುಲ್ ಗಾಂಧಿ ಅವರು ದೇಶದ ಶಿಕ್ಷಣ ವ್ಯವಸ್ಥೆ ಕುರಿತು ಮಾತನಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, 'ಭ್ರಷ್ಟ, ಅಪ್ರಮಾಣಿಕ, ಅನ್ಯಾಯ, ಪಕ್ಷಪಾತ - ಇದು ಭಾರತದ ಶಿಕ್ಷಣ ವ್ಯವಸ್ಥೆ ಕುರಿತು ಇಂದಿನ ವಿದ್ಯಾರ್ಥಿಗಳು ಉಪಯೋಗಿಸುತ್ತಿರುವ ಪದಗಳಾಗಿವೆ' ಎಂದು ಹೇಳಿದ್ದಾರೆ.
ಶಿಕ್ಷಣ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಇದು ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣವಾಗಿದೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಪರಿಶ್ರಮ ವ್ಯರ್ಥವಾಗುತ್ತಿದೆ. ಆದರೆ, ಧರ್ಮೇಂದ್ರ ಪ್ರಧಾನ್ ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಈ ವಿಷಯದಲ್ಲಿ ಮೌನವಹಿಸಿದ್ದಾರೆ. ಈ ಕುರಿತು ಕೇಂದ್ರ ಸರ್ಕಾರವು ಯಾವುದೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಮಕ್ಕಳ ಭವಿಷ್ಯವನ್ನು ರೂಪಿಸಬೇಕಾಗಿದ್ದ ವ್ಯವಸ್ಥೆಯು ಅವರು ಮತ್ತು ಅವರ ಪೋಷಕರನ್ನು ಸಾಲ, ಒತ್ತಡ ಮತ್ತು ಹತಾಶೆಗೆ ತಳ್ಳುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಜೂನ್ 17ರಂದು ರಾಜಸ್ಥಾನದ ಕೋಟಾದಲ್ಲಿ ರಾಹುಲ್ ಗಾಂಧಿ ನಾಯಕತ್ವದಲ್ಲಿ ಮೊದಲ ಬಾರಿ 'ಛಾತ್ರೋಂ ಕಿ ಗೂಂಜ್'ಕಾರ್ಯಕ್ರಮ ನಡೆಸಲಾಗಿತ್ತು.

