ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ಶೀಘ್ರ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಬಲವಾಗಿ ತಿರಸ್ಕರಿಸಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ತನ್ನ ಬೇಡಿಕೆಯನ್ನು ಪುನರುಚ್ಚರಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರನ್ನು ತ್ವರಿತ ವಿಚಾರಣೆಗೆ ಒಳಪಡಿಸಲು ಮತ್ತು ಕಠಿಣ ಶಿಕ್ಷೆಯನ್ನು ಖಚಿತಪಡಿಸಲು ಕೇಂದ್ರ ಸರ್ಕಾರ ತ್ವರಿತ ನ್ಯಾಯಾಲಯ ಸ್ಥಾಪಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಕ್ಷಣಗಳಲ್ಲೇ ಸಿಜೆಪಿಯಿಂದ ಈ ಪ್ರತಿಕ್ರಿಯೆ ಬಂದಿದೆ.
'ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೇಕು' ಎಂದು ಸಿಜೆಪಿ ತನ್ನ 'ಎಕ್ಸ್' ಪೋಸ್ಟ್ನಲ್ಲಿ ಬರೆದುಕೊಂಡಿದೆ.
ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಸಿಜೆಪಿ ಜುಲೈ 20ರಂದು 'ಸಂಸತ್ ಚಲೊ' ಪ್ರತಿಭಟನಾ ಮೆರವಣಿಗೆ ನಡೆಸಿತ್ತು. ಇದರ ಬೆನ್ನಲ್ಲೇ ಸಿಜೆಪಿ ಪ್ರಮುಖರನ್ನು ಕರೆದು ಮಾತುಕತೆ ನಡೆಸಿದ್ದ ನಡ್ಡಾ, ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದರು. ಆದರೆ, ನಡ್ಡಾ ಅವರ ಜೊತೆಗಿನ ಮಾತುಕತೆ ನಿಷ್ಟ್ರಯೋಜಕ ಎಂದಿದ್ದ ಸಿಜೆಪಿ, ಪ್ರತಿಭಟನೆ ಮುಂದುವರಿಸುವುದಾಗಿ ಘೋಷಿಸಿತ್ತು.
ಜಂತರ್ ಮಂತರ್ ಕಡೆಗೆ ಸಮರೋಪಾದಿಯಲ್ಲಿ ಜನರು ಬರುತ್ತಿರುವುದನ್ನು ಗಮನಿಸಿದ ದೆಹಲಿ ಸರ್ಕಾರ, ಇಂದು(ಗುರುವಾರ) 16 ಮೆಟ್ರೊ ನಿಲ್ದಾಣಗಳನ್ನು ಮುಚ್ಚಿದೆ.

