ಮಂಜೇಶ್ವರ: ಆಗಸ್ಟ್ 8 ರಂದು ಗುರುವಾಯೂರಿನಲ್ಲಿ ನಡೆಯಲಿರುವ ಹಿಂದೂ ಸಮಾಜ ಸೌಹಾರ್ದ ವೇದಿಕೆಯ ರಾಜ್ಯ ಸಮ್ಮೇಳನವನ್ನು ಯಶಸ್ವಿಗೊಳಿಸುವ ಕುರಿತು ಜಿಲ್ಲಾ ಸಮಿತಿ ಸಭೆ ಮಂಜೇಶ್ವರದಲ್ಲಿ ನಡೆಯಿತು. ಸಮ್ಮೇಳನವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಸಭೆಯಲ್ಲಿ ಕರೆ ನೀಡಲಾಯಿತು.
ಹಿಂದುಳಿದ ವರ್ಗಗಳ, ಸಮುದಾಯಗಳ ಹಕ್ಕುಗಳು ಮತ್ತು ನ್ಯಾಯಸಮ್ಮತ ಬೇಡಿಕೆಗಳ ಕುರಿತು ಚರ್ಚಿಸಲಾಯಿತು. ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಸಂಘಟಿತವಾಗಿ ಹೋರಾಟ ನಡೆಸುವ ಅಗತ್ಯವಿದೆ ಎಂದು ಸಭೆ ಅಭಿಪ್ರಾಯಪಟ್ಟಿತು. ಹಿಂದುಳಿದ ವರ್ಗಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಏಕರೂಪದ ಮೀಸಲಾತಿ ವ್ಯವಸ್ಥೆಯನ್ನು ಜಾರಿಗೊಳಿಸಬೇಕು, ಶಿಕ್ಷಣ, ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಿಂದುಳಿದ ವರ್ಗಗಳಿಗೆ ಸಮಾನ ಅವಕಾಶ ಕಲ್ಪಿಸಬೇಕು, ದೇವಸ್ವಂ ಬೋರ್ಡ್ ಗಳ ವಿವಿಧ ಸಮಿತಿಗಳಲ್ಲಿ ಹಿಂದುಳಿದ ವರ್ಗಗಳ ಸಮುದಾಯದ ಸದಸ್ಯರನ್ನು ಸೇರ್ಪಡೆಗೊಳಿಸಿ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಡಲಾಯಿತು.
ಹಿಂದೂ ಸಮಾಜ ಸೌಹಾದರ್s ವೇದಿಕೆಯ ಜಿಲ್ಲಾ ಅಧ್ಯಕ್ಷ ಹರಿಶ್ಚಂದ್ರ ಮಂಜೇಶ್ವರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಗಟ್ಟಿ ಕುಂಬಳೆ, ಕಾರ್ಯಾಧ್ಯಕ್ಷ ಬಾಲಕೃಷ್ಣ ಬಾಯಾರ್, ಕಾರ್ಯದರ್ಶಿ ಪುರುಷೋತ್ತಮ ಮುಟ್ಟಂ, ಕೋಶಾಧಿಕಾರಿ ಯೋಗೀಶ್ ಕುಚ್ಚಿಕಾಡ್, ಈಶ್ವರ ಕುಲಾಲ್, ಕಣ್ವತೀರ್ಥ, ವಿಠಲ ಜೋಗಿ ಬಾಯಾರ್, ರತೇಶ್ ಐಲ, ಪ್ರಕಾಶ್ ಕೀರ್ತೇಶ್ವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

