ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್ಜೆ) ಸಮೀರ್ ಬಾಜ್ಪೈ ಅವರು ಈ ಆದೇಶ ನೀಡಿದ್ದಾರೆ.
ಈ ಹಿಂದೆ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿತ್ತು. ಆದರೆ, ಆ ತೀರ್ಪಿಗೆ ಸಂಬಂಧಿಸಿದ ಕೆಲವು ಕಾನೂನು ಪ್ರಶ್ನೆಗಳು ಸುಪ್ರೀಂ ಕೋರ್ಟ್ನ ಮತ್ತೊಂದು ಪೀಠದ ಮುಂದೆ ಪ್ರಸ್ತಾಪವಾಗಿದ್ದ ಹಿನ್ನೆಲೆಯಲ್ಲಿ, ಇಬ್ಬರೂ ಹೊಸದಾಗಿ ಜಾಮೀನು ಕೋರಿ ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿದ್ದರು.
ತಮ್ಮ ಅರ್ಜಿಯಲ್ಲಿ, ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದ ತೀರ್ಪು ಹೊರಬಂದ ಬಳಿಕ ಆರು ತಿಂಗಳಿಗಿಂತ ಹೆಚ್ಚು ಅವಧಿ ಕಳೆದಿದ್ದರೂ, ಪ್ರಕರಣದ ವಿಚಾರಣೆಯಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ ಎಂದು ಅವರು ವಾದಿಸಿದರು. ಆರೋಪಗಳ ಮೇಲಿನ ವಾದಗಳು ಇನ್ನೂ ಪೂರ್ಣಗೊಂಡಿಲ್ಲ ಹಾಗೂ ತಾವು ಸುಮಾರು ಆರು ವರ್ಷಗಳಿಂದ ಜೈಲಿನಲ್ಲಿದ್ದೇವೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ಉಮರ್ ಖಾಲಿದ್ ಪರವಾಗಿ ಹಿರಿಯ ವಕೀಲ ತ್ರಿದೀಪ್ ಪೈಸ್ ವಾದ ಮಂಡಿಸಿ, ಅಂದ್ರಾಬಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಖಾಲಿದ್ ಅವರಿಗೆ ಜಾಮೀನು ನೀಡಲು ಅವಕಾಶವಿದೆ ಎಂದು ಹೇಳಿದರು. ಜೊತೆಗೆ, ಖಾಲಿದ್ ಮತ್ತು ಇಮಾಮ್ ಅವರು ಒಂದು ವರ್ಷದವರೆಗೆ ಅಥವಾ ಕೆಲವು ಸಾಕ್ಷಿಗಳ ವಿಚಾರಣೆ ಪೂರ್ಣಗೊಳ್ಳುವವರೆಗೆ ಹೊಸ ಜಾಮೀನು ಅರ್ಜಿ ಸಲ್ಲಿಸಬಾರದು ಎಂಬ ಹಿಂದಿನ ನಿರ್ಬಂಧವು ಈ ಪ್ರಕರಣಕ್ಕೆ ಅನ್ವಯಿಸುವುದಿಲ್ಲ ಎಂದು ವಾದ ಮಂಡಿಸಿದಯರು.
ಶರ್ಜೀಲ್ ಇಮಾಮ್ ಪರ ವಕೀಲ ತಾಲಿಬ್ ಮುಸ್ತಫಾ ವಾದ ಮಂಡಿಸಿ, ಒಂದು ವರ್ಷದವರೆಗೆ ಜಾಮೀನು ಅರ್ಜಿ ಸಲ್ಲಿಸದಂತೆ ವಿಧಿಸಲಾದ ನಿರ್ಬಂಧದ ಕಾನೂನುಬದ್ಧತೆಯನ್ನು ಸುಪ್ರೀಂ ಕೋರ್ಟ್ನ ವಿಸ್ತೃತ ಪೀಠವು ಪರಿಶೀಲಿಸಬೇಕಾಗಿದೆ ಎಂದು ತಿಳಿಸಿದರು. ಇದೇ ಪ್ರಕರಣದಲ್ಲಿರುವ ಇತರ ಕೆಲವು ಆರೋಪಿಗಳು ಈ ವಿಷಯವನ್ನು ವಿಸ್ತೃತ ಪೀಠಕ್ಕೆ ಒಪ್ಪಿಸಿರುವುದರಿಂದ ಅದರ ಪ್ರಯೋಜನವನ್ನು ಪಡೆದಿದ್ದಾರೆ ಎಂದೂ ಹೇಳಿದರು.
ಇದಕ್ಕೆ ಪ್ರತಿಯಾಗಿ ದಿಲ್ಲಿ ಪೊಲೀಸರ ಪರ ವಕೀಲರು, ಸುಪ್ರೀಂ ಕೋರ್ಟ್ನ ವಿಸ್ತೃತ ಪೀಠದಿಂದ ಸ್ಪಷ್ಟೀಕರಣ ಬರುವವರೆಗೆ, ಸುಪ್ರೀಂ ಕೋರ್ಟ್ನ ಹಿಂದಿನ ಆದೇಶಗಳು ಮತ್ತು ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎಂದು ವಾದಿಸಿದರು.
"ಅರ್ಜಿದಾರರಿಗೆ ಯಾವುದೇ ಆಕ್ಷೇಪಣೆ ಇದ್ದರೆ, ಅವರು ಸುಪ್ರೀಂ ಕೋರ್ಟ್ನನ್ನೇ ಸಂಪರ್ಕಿಸಿ ಸ್ಪಷ್ಟೀಕರಣ ಪಡೆಯಬೇಕಿತ್ತು. ಸುಪ್ರೀಂ ಕೋರ್ಟ್ ಈಗಾಗಲೇ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ, ಅದನ್ನು ಮರುಪರಿಶೀಲಿಸಲು ಈ ನ್ಯಾಯಾಲಯಕ್ಕೆ ಅಧಿಕಾರವಿಲ್ಲ" ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು.
ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಸಲ್ಲಿಸಿದ್ದ ಹೊಸ ಜಾಮೀನು ಅರ್ಜಿಗಳನ್ನು ವಜಾಗೊಳಿಸಿ ಆದೇಶ ಹೊರಡಿಸಿತು.

