ನವದೆಹಲಿ: ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚೂಕ್ ಅವರ ಪ್ರಾಣ ಉಳಿಸಲು ಸರ್ಕಾರಗಳು ತುರ್ತಾಗಿ ಮಧ್ಯಪ್ರವೇಶಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್) ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರ ಮತ್ತು ದೆಹಲಿ ಸರ್ಕಾರಗಳ ಪ್ರತಿಕ್ರಿಯೆ ಕೇಳಿದೆ.
ವಕೀಲ ರಾಕೇಶ್ ಕುಮಾರ್ ಸೈನಿ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ದ್ವಿಸದಸ್ಯ ಪೀಠ ಕೈಗೆತ್ತಿಕೊಂಡಿದೆ.
ವಿಷಯದ ತುರ್ತನ್ನು ಗಮನಿಸಿದ ನ್ಯಾಯಾಲಯ, ಅರ್ಜಿಯ ವಿಚಾರಣೆಯನ್ನು ನಾಳೆ (ಜುಲೈ 16) ನಡೆಸುವುದಾಗಿ ತಿಳಿಸಿತು.
ಅರ್ಜಿಯ ಪ್ರತಿ ಮತ್ತು ಆದೇಶದ ಪ್ರತಿಯನ್ನು ಕೇಂದ್ರ ಹಾಗೂ ದೆಹಲಿ ಸರ್ಕಾರಗಳ ಕಾನೂನು ಅಧಿಕಾರಿಗಳಿಗೆ ತಲುಪಿಸುವಂತೆ ನ್ಯಾಯಾಲಯ ನಿರ್ದೇಶನ ನೀಡಿತು.
ಅರ್ಜಿಯಲ್ಲಿ ಏನಿದೆ?
ವಾಂಗ್ಚೂಕ್ ಅವರ ಆರೋಗ್ಯ ಕ್ಷೀಣಿಸುತ್ತಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಬಲವಂತವಾಗಿ ಆಹಾರ ನೀಡುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಗಳಿಗೆ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಕೋರಿದ್ದಾರೆ.
'ವಾಂಗ್ಚೂಕ್ ಅವರು ಈಗಾಗಲೇ 8.5 ಕೆ.ಜಿ ತೂಕ ಕಳೆದುಕೊಂಡಿದ್ದಾರೆ. ಉಪವಾಸ ಮುಂದುವರಿಸಿದರೆ ಇನ್ನೆರಡು ದಿನಗಳಲ್ಲಿ ಅವರ ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆಯಿದೆ' ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಒಂದು ವೇಳೆ ಉಪವಾಸ ಸತ್ಯಾಗ್ರಹ ಮಾಡಿ ವಾಂಗ್ಚೂಕ್ ಅವರು ಮೃತಪಟ್ಟರೆ, ಅದು ಇಡೀ ದೇಶ ತಲೆತಗ್ಗಿಸುವ ಸಂಗತಿಯಾಗಲಿದೆ ಎಂದು ತಿಳಿಸಿದ್ದಾರೆ.
18ನೇ ದಿನಕ್ಕೆ ವಾಂಗ್ಚೂಕ್ ಉಪವಾಸ:
ಸೋನಮ್ ವಾಂಗ್ಚೂಕ್ ಅವರು ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿ ಇಂದಿಗೆ 18 ದಿನ ಕಳೆದಿದೆ.
ಪರೀಕ್ಷಾ ಅಕ್ರಮಗಳನ್ನು ಖಂಡಿಸಿ, ಕಾಕ್ರೋಚ್ ಜನತಾ ಪಾರ್ಟಿಯು (ಸಿಜೆಪಿ) ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ಆರಂಭಿಸಿ 26 ದಿನಗಳಾಗಿವೆ. ಈ ಪ್ರತಿಭಟನೆಯನ್ನು ಬೆಂಬಲಿಸಿ ವಾಂಗ್ಚೂಕ್ ಅವರು ಉಪವಾಸ ಆರಂಭಿಸಿದ್ದಾರೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಅಕ್ರಮ ನಡೆದ ಕಾರಣ ಪರೀಕ್ಷೆ ರದ್ದಾಗಿದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡ ಅಭ್ಯರ್ಥಿಗಳ ಕುಟುಂಬಕ್ಕೆ ತಲಾ ₹1
ಕೋಟಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಸಿಜೆಪಿ ಪ್ರತಿಭಟನೆ ನಡೆಸುತ್ತಿದೆ.

