ಮಂಜೇಶ್ವರ: ಮಂಜೇಶ್ವರ ತಾಲೂಕು ಸಪ್ಲೈ ಆಫೀಸ್ ವಿಸ್ತರಣೆ ಮತ್ತು ಅಭಿವೃದ್ಧಿ ವಿಷಯದಲ್ಲಿ ಶಾಸಕರು ನಿರ್ಲಕ್ಷ್ಯ ವಹಿಸುತ್ತಿರುವುದಾಗಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ. ವಲ್ಸರಾಜ್ ಆರೋಪಿಸಿದ್ದಾರೆ. ತಾಲೂಕಿನ ಸಾವಿರಾರು ಜನರಿಗೆ ಆಸರೆಯಾಗಿರುವ ಈ ಕಚೇರಿಯ ಮೂಲಭೂತ ಸೌಕರ್ಯ ಅಭಿವೃದ್ಧಿ ವಿಷಯದಲ್ಲಿ ಜನಪ್ರತಿನಿಧಿಗಳು ಉದಾಸೀನತೆ ತೋರುತ್ತಿರುವುದಾಗಿ ಅವರು ದೂರಿದ್ದಾರೆ.
ಸಪ್ಲೈ ಕಚೇರಿಯಲ್ಲಿ ಕನಿಷ್ಠ ಸೌಕರ್ಯಗಳೂ ಇಲ್ಲದ ಕಾರಣ ಪ್ರತಿನಿತ್ಯ ಇಲ್ಲಿಗೆ ಆಗಮಿಸುವ ನೂರಾರು ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿಯೂ ಇದೆ. ಕಚೇರಿಯನ್ನು ವಿಸ್ತರಿಸಿ ಜನರಿಗೆ ಸೌಲಭ್ಯ ಕಲ್ಪಿಸಲು ಶಾಸಕರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಅವರು ಆರೋಪಿಸಿದ್ದಾರೆ. ಈ ವಿಷಯದಲ್ಲಿ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು, ಇಲ್ಲದಿದ್ದರೆ ಒಬಿಸಿ ಮೋರ್ಚಾ ನೇತೃತ್ವದಲ್ಲಿ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಕೆ.ಪಿ. ವಲ್ಸರಾಜ್ ಎಚ್ಚರಿಸಿದ್ದಾರೆ.

