ನವದೆಹಲಿ: ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ವಿರೋಧಿಸಿ 'ಇಂಡಿಯಾ' ಮೈತ್ರಿಕೂಟವು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಜಂಟಿ ಪತ್ರ ಬರೆದಿದೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಂಸದ ಜೈರಾಮ್ ರಮೇಶ್, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳಿದ್ದು, ಆಯೋಗವು ಸಂಪೂರ್ಣವಾಗಿ ಏಕಪಕ್ಷೀಯವಾಗಿ ವರ್ತಿಸುತ್ತಿದೆ. ದೇಶದಲ್ಲಿ ಪ್ರಸ್ತುತ 'ಮತಗಳು ಮತ್ತು ಸೀಟುಗಳ ದುರುಪಯೋಗ' ನಡೆಯುತ್ತಿದ್ದು, ಇದರಿಂದಾಗಿ ಚುನಾವಣಾ ವ್ಯವಸ್ಥೆಯ ಮೇಲಿದ್ದ ಸಾರ್ವಜನಿಕರ ವಿಶ್ವಾಸ ಸಂಪೂರ್ಣವಾಗಿ ಕ್ಷೀಣಿಸಿದೆ ಎಂದು ಜೈರಾಮ್ ರಮೇಶ್ ಆತಂಕ ವ್ಯಕ್ತಪಡಿಸಿದ್ದಾರೆ.
ಚುನಾವಣಾ ಫಲಿತಾಂಶಗಳು ಮೊದಲೇ ನಿಗದಿಯಾಗಿರುತ್ತವೆ ಎಂಬ ಭಾವನೆ ಸಾರ್ವಜನಿಕರಲ್ಲಿ ಮೂಡುತ್ತಿದ್ದು, ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ. ಚುನಾವಣಾ ಫಲಿತಾಂಶಗಳು ಮೊದಲೇ ಫಿಕ್ಸ್ ಆಗಿರುತ್ತವೆ ಎನ್ನುವುದಾದರೆ, ದೇಶದಲ್ಲಿ ಚುನಾವಣೆಗಳನ್ನು ನಡೆಸುವ ಅಗತ್ಯವಾದರೂ ಏನಿದೆ? ಎಂದು ರಮೇಶ್ ಪ್ರಶ್ನಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಡವಳಿಕೆಯನ್ನು ಟೀಕಿಸಿದ ಅವರು, ಪಶ್ಚಿಮ ಬಂಗಾಳ, ಬಿಹಾರ, ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳಲ್ಲಿ ಚುನಾವಣಾ ಆಯೋಗವು ಪ್ರಧಾನಿ ಮತ್ತು ಗೃಹ ಸಚಿವರ ಆದೇಶದಂತೆ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
ಅಯೋಧ್ಯೆಯ ರಾಮಮಂದಿರ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಪ್ರಸ್ತಾಪಿಸಿದ ರಮೇಶ್, ಪ್ರಸ್ತುತ ದೇಶದಲ್ಲಿ 'ಮತಗಳ, ಸೀಟುಗಳ ಮತ್ತು ದೇಣಿಗೆ' ದುರುಪಯೋಗ ಆಗುತ್ತಿದೆ ಎಂದು ಲೇವಡಿ ಮಾಡಿದ್ದಾರೆ.

