ಮುಂಬೈ: ಪರೀಕ್ಷಾ ಅಕ್ರಮಗಳ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಮತ್ತು ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚೂಕ್ ಅವರು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸುವುದಾಗಿ ಸೋಮವಾರ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, 'ರಾಜಕೀಯ ಸಿದ್ಧಾಂತಗಳನ್ನು ಬದಿಗಿಟ್ಟು ಪಕ್ಷಗಳು ಈ ಪ್ರತಿಭಟನೆಗೆ ಬೆಂಬಲ ನೀಡಬೇಕು' ಎಂದು ಕರೆ ನೀಡಿದ್ದಾರೆ.
'ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಿಜೆಪಿ ಪ್ರತಿಭಟನೆಗೆ ಬೆಂಬಲ ನೀಡಬೇಕು. ರಾಜಕೀಯ ಪಕ್ಷಗಳು ಈ ವಿಷಯದ ಕುರಿತು ತಮ್ಮ ತಮ್ಮ ರಾಜ್ಯಗಳಲ್ಲಿ ಪ್ರತಿಭಟನೆ ನಡೆಸುವ ಮೂಲಕ ದೇಶವನ್ನು ಎಚ್ಚರಿಸಬೇಕು' ಎಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯನ್ನು ಹತ್ತಿಕ್ಕಲು ಸಂಚು ರೂಪಿಸಲಾಗಿದೆ ಎಂಬ ದೀಪ್ಕೆ ಅವರ ಆರೋಪವನ್ನು ಪುನರುಚ್ಛರಿಸಿದ ಠಾಕ್ರೆ, 'ಇದು ರಾಜಕೀಯ ವಿಷಯವಲ್ಲ, ದೇಶಕ್ಕೆ ಸಂಬಂಧಿಸಿದ ವಿಷಯವಾಗಿರುವುದರಿಂದ ಎಲ್ಲಾ ಯುವಕರು ಮತ್ತು ಅವರ ಪೋಷಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು' ಎಂದು ಹೇಳಿದ್ದಾರೆ.
'ಕೇಂದ್ರ ಶಿಕ್ಷಣ ಸಚಿವ ಪ್ರಧಾನ್ ಅವರಿಗೆ ರಾಜೀನಾಮೆ ನೀಡುವಂತೆ ಕೇಳುವುದರಲ್ಲಿ ಮತ್ತು ಅವರಿಗಿಂತ ಹೆಚ್ಚು ಸಾಮರ್ಥ್ಯವಿರುವ ವ್ಯಕ್ತಿಯನ್ನು ಆ ಸ್ಥಾನಕ್ಕೆ ನೇಮಿಸುವುದರಲ್ಲಿ ಯಾವುದೇ ತಪ್ಪಿಲ್ಲ' ಎಂದು ತಿಳಿಸಿದ್ದಾರೆ.
'ಜುಲೈ 20ರಂದು ಸಿಜೆಪಿಯು ಸಂಸತ್ತಿನ ಮುಂದೆ ಪ್ರತಿಭಟನೆ ನಡೆಸಲಿದೆ. ಅವರ ಹೋರಾಟಕ್ಕೆ ಬೆಂಬಲವಾಗಿ ನಮ್ಮ ಪಕ್ಷದಿಂದ ಮಹಾರಾಷ್ಟ್ರದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ' ಎಂದು ಘೋಷಿಸಿದ್ದಾರೆ.
ಮುಂದುವರಿದು, ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ನಮ್ಮ ಸಂಸದರು ಸಿಜೆಪಿ ಪ್ರತಿಭಟನೆಯ ವಿಷಯವನ್ನು ಪ್ರಸ್ತಾಪಿಸಲಿದ್ದಾರೆ ಎಂದು ಭರವಸೆ ನೀಡಿದ್ದಾರೆ.
ಇದೇ ವೇಳೆ ಉಪವಾಸ ಸತ್ಯಾಗ್ರಹವನ್ನು ಹಿಂಪಡೆಯುವಂತೆ ವಾಂಗ್ಚೂಕ್ ಅವರಿಗೆ ಮನವಿ ಮಾಡಿದ್ದಾರೆ.
24ನೇ ದಿನಕ್ಕೆ ಪ್ರತಿಭಟನೆ:
ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ನವದೆಹಲಿಯ ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು 24ನೇ ದಿನಕ್ಕೆ ಕಾಲಿಟ್ಟಿದೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಅಕ್ರಮ ನಡೆದ ಕಾರಣ ಪರೀಕ್ಷೆ ರದ್ದಾಗಿದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡ ಅಭ್ಯರ್ಥಿಗಳ ಕುಟುಂಬಕ್ಕೆ ತಲಾ ₹1
ಕೋಟಿ ಪರಿಹಾರ ನೀಡಬೇಕು ಎಂದು ಸಿಜೆಪಿ ಒತ್ತಾಯಿಸುತ್ತಿದೆ.
ಹದಗೆಟ್ಟ ವಾಂಗ್ಚೂಕ್ ಆರೋಗ್ಯ:
ಪರಿಸರ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರು ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿ ಇಂದಿಗೆ(ಸೋಮವಾರ) 16 ದಿನ ಕಳೆದಿದೆ. ಅವರ ಆರೋಗ್ಯ ಸ್ಥಿತಿ ದಿನೇ ದಿನೇ ಹದಗೆಡುತ್ತಿದ್ದು, ತೂಕವು ಒಟ್ಟು 7.8 ಕೆ.ಜಿ ಕಡಿಮೆಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ವಾಂಗ್ಚೂಕ್ ಅವರ ರಕ್ತದೊತ್ತಡವೂ ಕಡಿಮೆಯಾಗಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಸೇನಾ(ಯುಬಿಟಿ) ರಾಜ್ಯಸಭಾ ಸಂಸದ ಸಂಜಯ್ ರಾವುತ್, ವಾಂಗ್ಚೂಕ್ ಅವರು ಜೀವಂತವಾಗಿರುವುದನ್ನು ಸರ್ಕಾರ ಬಯಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

