ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಅವಮಾನಿಸಿದ್ದಾರೆ ಎಂದು ಪ್ರತಿಪಕ್ಷಗಳು ಶನಿವಾರ ಆರೋಪಿಸಿವೆ.
ಜಂತರ್ ಮಂತರ್ನಲ್ಲಿ ಉಪವಾಸ ಮುಷ್ಕರ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಅವರನ್ನು ದಿಲ್ಲಿ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿದ ಬಳಿಕ ಪ್ರತಿಪಕ್ಷಗಳು ಈ ಆರೋಪ ಮಾಡಿವೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಸೋನಮ್ ವಾಂಗ್ಚುಕ್ ಅವರು ಅಹಿಂಸಾತ್ಮಕ ಉಪವಾಸ ಮುಷ್ಕರ ನಡೆಸುತ್ತಿದ್ದರು. ಅವರನ್ನು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿದ್ದು ತಪ್ಪು ಎಂದಿದ್ದಾರೆ.
ಮೋದಿ ಸರಕಾರದ ಮೂಲ ತತ್ವಗಳೇ ಅಸತ್ಯ ಮತ್ತು ಹಿಂಸೆ ಎಂದು ರಾಹುಲ್ ಗಾಂಧಿ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆ, ಹೆಚ್ಚುತ್ತಿರುವ ಶಿಕ್ಷಣ ವೆಚ್ಚ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆಗಳು ಭಾರತದ ಭವಿಷ್ಯದ ನಿರ್ಣಾಯಕ ವಿಷಯಗಳಾಗಿವೆ ಎಂದು ಅವರು ತಿಳಿಸಿದರು.
ಯಾವ ಶಕ್ತಿಯೂ ಭಾರತದ ವಿದ್ಯಾರ್ಥಿಗಳನ್ನು ಮತ್ತು ಅವರ ಪ್ರೀತಿ ಹಾಗೂ ನಂಬಿಕೆ ಇರಿಸಿರುವ ನಮ್ಮನ್ನು ಈ ವಿಷಯಗಳ ಕುರಿತು ಪ್ರಶ್ನೆ ಎತ್ತದಂತೆ ತಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿ, ಸರಕಾರ ವಾಂಗ್ಚುಕ್ ಅವರೊಂದಿಗೆ ಮಾತುಕತೆ ನಡೆಸಬೇಕಿತ್ತು ಎಂದು ಹೇಳಿದ್ದಾರೆ. ಮತ್ತೊಂದು ಪೋಸ್ಟ್ನಲ್ಲಿ ಅವರು, ಸರಕಾರ 'ಕಾಕ್ರೋಚ್ ಚಳುವಳಿ'ಯನ್ನು ಹತ್ತಿಕ್ಕುವ ಬದಲು ದೇಶದ ಶಿಕ್ಷಣ ಮತ್ತು ಪರೀಕ್ಷಾ ವ್ಯವಸ್ಥೆಯನ್ನು ಸುಧಾರಿಸುವತ್ತ ಗಮನಹರಿಸಬೇಕು ಎಂದರು.
ರಾಜಕೀಯ ಅಭಿಯಾನವಾದ 'ಕಾಕ್ರೋಚ್ ಜನತಾ ಪಾರ್ಟಿ' ಪ್ರತಿಭಟನೆಗೆ ಕೈಜೋಡಿಸುವಂತೆ ಕೇಜ್ರಿವಾಲ್ ಸಾರ್ವಜನಿಕರಿಗೆ ಕರೆ ನೀಡಿದರು. ವಾಂಗ್ಚುಕ್, ಅಭಿಯಾನದ ಸಂಸ್ಥಾಪಕ ಅಭಿಜಿತ್ ದೀಪ್ಕೆ ಮತ್ತು ಯುವ ಪ್ರತಿಭಟನಕಾರರು ಮಕ್ಕಳ ಭವಿಷ್ಯಕ್ಕಾಗಿ ಹೋರಾಡುತ್ತಿದ್ದಾರೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜಂತರ್ ಮಂತರ್ನಲ್ಲಿ ನಡೆದ ಘಟನೆಯನ್ನು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ಮತ್ತೊಂದು ಕಪ್ಪು ಚುಕ್ಕೆ ಎಂದು ಬಣ್ಣಿಸಿದ್ದಾರೆ.
ಈ ದಬ್ಬಾಳಿಕೆಯ ಸರಕಾರ ಯಾರನ್ನೂ ಬಿಟ್ಟಿಲ್ಲ ಎಂದು ಖರ್ಗೆ ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ. ''ಅವರ ಕಣ್ಣಿನಲ್ಲಿ ಧ್ವನಿ ಎತ್ತುವ ಪ್ರತಿಯೊಬ್ಬರೂ ದೇಶದ್ರೋಹಿ ಅಥವಾ ಪರಾವಲಂಬಿಗಳಾಗಿದ್ದಾರೆ'' ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸುವ ಬದಲು ಸರಕಾರ ವಾಂಗ್ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

