ನವದೆಹಲಿ: ಇಲ್ಲಿನ ಜಂತರ್ ಮಂತರ್ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರ ಆರೋಗ್ಯ ಕ್ಷೀಣಿಸಿದ ಹಿನ್ನೆಲೆಯಲ್ಲಿ, ವೈದ್ಯಕೀಯ ನೆರವು ಒದಗಿಸಲು ಪೊಲೀಸರು ಅವರನ್ನು ಸಫ್ದರ್ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.
ದೆಹಲಿ ಹೈಕೋರ್ಟ್ ನಿರ್ದೇಶನದಂತೆ ವಾಂಗ್ಚೂಕ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ದೆಹಲಿ ಉಪ ಪೊಲೀಸ್ ಕಮಿಷನರ್ (ಡಿಸಿಪಿ) ಸಚಿನ್ ಶರ್ಮಾ ತಿಳಿಸಿದ್ದಾರೆ.
'ಸೊನಮ್ ವಾಂಗ್ಚೂಕ್ ಅವರನ್ನು ಆರೋಗ್ಯ ತಪಾಸಣೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೀರ್ಘಾವಧಿಯ ಉಪವಾಸ ಮತ್ತು ನಿರ್ಜಲೀಕರಣದಿಂದಾಗಿ ವಾಂಗ್ಚೂಕ್ ಬಳಲುತ್ತಿದ್ದಾರೆ. ಅವರ ಅಂಗಾಂಗಗಳನ್ನು ಮೊದಲಿನ ಸ್ಥಿತಿಗೆ ತರಲು ನಿರಂತರ ಮೇಲ್ವಿಚಾರಣೆ ಮತ್ತು ಚಿಕಿತ್ಸೆಯ ಅಗತ್ಯವಿದೆ' ಎಂದು ಮೂಲಗಳು ತಿಳಿಸಿವೆ.
ವಾಂಗ್ಚೂಕ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಕೆಲವು ಪ್ರತಿಭಟನಾಕಾರರು ಪೊಲೀಸರಿಗೆ ಅಡ್ಡಿಪಡಿಸಲು ಯತ್ನಿಸಿದ್ದರಿಂದ ಕೆಲಕಾಲ ಗೊಂದಲದ ಪರಿಸ್ಥಿತಿ ಉಂಟಾಗಿತ್ತು.
ಪೊಲೀಸ್ ಕ್ರಮದ ಬೆನ್ನಲ್ಲೇ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದಿಪ್ಕೆ ಅವರು ಪ್ರತಿಭಟನಾಕಾರರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
'ವಾಂಗ್ಚೂಕ್ ಅವರನ್ನು ಬಿಳಿ ಚಾದರದಲ್ಲಿ ಸುತ್ತಿಕೊಂಡು ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದು ದೇಶಕ್ಕಾದ ಅವಮಾನ' ಎಂದೂ ಅವರು ದೂರಿದ್ದಾರೆ.

