ನವದೆಹಲಿ (PTI): ದೇಶದ ಕೆಲವು ಭಾಗಗಳಲ್ಲಿ ಉಂಟಾಗಿರುವ ಮಳೆ ಕೊರತೆ ಮತ್ತು ಸಂಭಾವ್ಯ ಬರ ಪರಿಸ್ಥಿತಿಯನ್ನು ಸರ್ಕಾರ ನಿರಂತರವಾಗಿ ಗಮನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ. ಅಲ್ಲದೆ, ಯಾವುದೇ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿರುವಂತೆ ಸಚಿವಾಲಯಗಳಿಗೆ ಸೂಚನೆ ನೀಡಿದ್ದಾರೆ.
ಅಮಿತ್ ಶಾ ಅವರು ಬರ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಸಭೆ ನಡೆಸಿದರು. 'ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಬೆಳೆಗಳ ಬಗ್ಗೆ ರೈತರಿಗೆ ಸಲಹೆ ನೀಡುವಂತೆ ಸಚಿವಾಲಯಗಳಿಗೆ ಶಾ ಅವರು ನಿರ್ದೇಶನ ನೀಡಿದರು' ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
'ಕೃಷಿ ಸಚಿವಾಲಯ ಮತ್ತು ಎಲ್ಲಾ ಸಂಬಂಧಿತ ಸಚಿವಾಲಯಗಳು ಸಂಭಾವ್ಯ ಬರ ಪರಿಸ್ಥಿತಿ ಎದುರಿಸಲು ಸಜ್ಜಾಗಿರಬೇಕು ಹಾಗೂ ರೈತರಿಗೆ ಸೂಕ್ತವಾದ ಬೆಳೆಗಳ ಕುರಿತು ಸಲಹೆ ನೀಡಲು ರಾಜ್ಯ ಸರ್ಕಾರಗಳೊಂದಿಗೆ ಸಮನ್ವಯ ಸಾಧಿಸಬೇಕೆಂದು ನಿರ್ದೇಶನ ನೀಡಿದರು. ಸುಗಮ ಮತ್ತು ಸಮರ್ಪಕ ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಇಂಧನ ಸಚಿವಾಲಯದ ಕಾರ್ಯರ್ಶಿಗೂ ಸೂಚನೆ ನೀಡಿದರು' ಎಂದು ಪ್ರಕಟಣೆ ಹೇಳಿದೆ.

