ಕುಂಬಳೆ: ಪತ್ರಿಕೆಗಳ ಉನ್ನತಿಯಲ್ಲಿ ಪತ್ರಿಕಾ ವಿತರಕರ ಪಾತ್ರ ಮಹತ್ವದ್ದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ತಿಳಿಸಿದ್ದಾರೆ. ಅವರು ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಜಿಲ್ಲಾಘಟಕ ವತಿಯಿಂದ ಕುಂಬಳೆ ಸನಿಹದ ನಾಯ್ಕಾಪು ಲಿಟ್ಲ್ ಲಿಲ್ಲಿ ಆಂಗ್ಲಮಾಧ್ಯಮ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕನ್ನಡ ಪತ್ರಿಕಾ ದಿನಾಚರಣೆ ಹಾಗೂ ಪತ್ರಿಕಾ ದಿನ ಪ್ರಶಸ್ತಿ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಪತ್ರಿಕಾ ಮಾಧ್ಯಮ ನಿಖರತೆ ಮತ್ತು ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳುವಲ್ಲಿ ಇಂದಿಗೂ ಯಶಸ್ವಿಯಾಗಿದ್ದು, ಪತ್ರಿಕೆ ಖರೀದಿಸಿ ಓದುವ ಮನೋಭಾವ ಬೆಳೆಸಿಕೊಂಡಾಗ ಪತ್ರಿಕಾರಂಗ ಬೆಳೆಯಲು ಸಾಧ್ಯ ಎಂದು ತಿಳಿಸಿದರು. ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ದೀರ್ಘ ಕಾಲದಿಂದ ಪತ್ರಿಕಾ ವಿತರಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಶ್ಯಾಮ ಪ್ರಸಾದ್ ನೀರ್ಚಾಲು ಅವರಿಗೆ ಪತ್ರಿಕಾ ದಿನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾಸರಗೋಡು ಜಿಲ್ಲಾ ಪಂಚಾಯಿತಿ ಸದಸ್ಯ, ಸೋಮಶೇಖರ ಜೆ.ಎಸ್ ಪ್ರಶಸ್ತಿಪ್ರದಾನ ಮಾಡಿ ಮಾತನಾಡಿ, ಪತ್ರಿಕಾವಿತರಣೆ ಎಂಬುದು ಸಾಹಸದ ಕೆಲಸವಾಗಿದ್ದು, ಓದುಗನ ಕೈಗೆ ಪತ್ರಿಕೆ ತಲುಪಿಸುವಲ್ಲಿ ಪತ್ರಿಕಾ ಏಜೆಂಟರ ಶ್ರಮ ಅಡಕವಾಗಿರುತ್ತದೆ ಎಂದು ತಿಳಿಸಿದರು.
ಕಾಸರಗೋಡು ಬ್ಲಾಕ್ ಪಂಚಾಯಿತಿ ಸದಸ್ಯ ಪೃಥ್ವೀರಾಜ್ ಶೆಟ್ಟಿಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶಿಕ್ಷಣ ತಜ್ಞ, ಹಿರಿಯ ಸಾಹಿತಿ ವಿ.ಬಿ ಕುಳಮರ್ವ ಪತ್ರಿಕಾ ದಿನ ಸಂದೇಶ ನೀಡಿದರು. ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಎ.ಆರ್ ಸುಬ್ಬಯ್ಯಕಟ್ಟೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ರಾಧಾಕೃಷ್ಣ ಉಳಿಯತ್ತಡ್ಕ, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಸರಸ್ವತೀ ಎ, ನಿವೃತ್ತ ಪ್ರಾಂಶುಪಾಲ ಪ್ರೊ. ಎ.ಶ್ರೀನಾಥ್, ಜಿಪಂ ಸದಸ್ಯ ರಾಮಪ್ಪ ಮಂಜೇಶ್ವರ, ರಾಘವ ಚೇರಾಲ್, ಟಿ. ಶಂಕರನಾರಾಯಣ ಭಟ್, ವಕೀಲ ಥಾಮಸ್ ಡಿ.ಸೋಜ, ಪ್ರೊ. ಪಿ.ಎನ್ ಮೂಡಿತ್ತಾಯ ಮೊದಲಾದವರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಶಾಲೆಯಲ್ಲಿ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ಹಾರ್ದಿಕ್ ಅವರನ್ನು ಗೌರವಿಸಲಾಯಿತು.
ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಗಂಗಾಧರ ತೆಕ್ಕೆಮೂಲೆ ಸ್ವಾಗತಿಸಿದರು. ಪುರುಷೋತ್ತಮ ಭಟ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಪ್ರಮಿಳಾ ಪ್ರಾರ್ಥನೆ ಹಾಡಿದರು. ಪುರುಷೋತ್ತಮ ಪೆರ್ಲ ವಂದಿಸಿದರು. ಈ ಸಂದರ್ಭ ಹುಸೈನ್ ಕುಬಣೂರು ಅವರಿಂದ ಮಿಮಿಕ್ರಿ ಕಾರ್ಯಕ್ರಮ ನಡೆಯಿತು.



