ನವದೆಹಲಿ: ಮದ್ಯ ಹಗರಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ನ ಹಿರಿಯ ನಾಯಕ ಭೂಪೇಶ್ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್ ಅವರಿಗೆ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಛತ್ತೀಸ್ಗಢ ಸರಕಾರ ಪತ್ಯೇಕವಾಗಿ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಮತ್ತು ವಿ. ಮೋಹನ್ ಅವರನ್ನೊಳಗೊಂಡ ಪೀಠ ಜಾಮೀನನ್ನು ಎತ್ತಿ ಹಿಡಿದಿದೆ. ಆದರೆ, ಜಾಮೀನು ನಡಾವಳಿಯ ಸಂದರ್ಭ ರಾಜ್ಯ ಪೊಲೀಸ್ನ ಆರ್ಥಿಕ ಅಪರಾಧಗಳ ತನಿಖಾ ಸಂಸ್ಥೆ (ಇಒಡಬ್ಲ್ಯು) ವಿರುದ್ಧ ಛತ್ತೀಸ್ಗಢ ಹೈಕೋರ್ಟ್ ಮಾಡಿದ್ದ ಪ್ರತಿಕೂಲ ಅಭಿಪ್ರಾಯಗಳನ್ನು ತೆರವುಗೊಳಿಸಿದೆ.
ಹಣ ಅಕ್ರಮ ವರ್ಗಾವಣೆ ಮತ್ತು ಭ್ರಷ್ಟಾಚಾರ-ಈ ಎರಡೂ ಪ್ರಕರಣಗಳಲ್ಲಿ ಬಘೇಲ್ ಅವರಿಗೆ ಉಚ್ಚ ನ್ಯಾಯಾಲಯ ಜಾಮೀನು ನೀಡಿದ ಬಳಿಕ ಇಡಿ ಮತ್ತು ರಾಜ್ಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)/ಇಒಡಬ್ಲ್ಯೂ ಪ್ರತ್ಯೇಕವಾಗಿ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದ್ದವು.
ಛತ್ತೀಸ್ಗಢ ಉಚ್ಚ ನ್ಯಾಯಾಲಯ ಜನವರಿ 2ರಂದು ಬಘೇಲ್ ಅವರಿಗೆ ಎರಡೂ ಪ್ರಕರಣಗಳಲ್ಲಿ ಜಾಮೀನು ಮಂಜೂರು ಮಾಡಿತ್ತು.

