ನವದೆಹಲಿ: ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಕ್ಷವು ಇಂದು ಸಂಸತ್ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದೆ. ಈ ವೇಳೆ, ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ ಸಂಭವಿಸಿದೆ.
ಪ್ರತಿಭಟನಾಕಾರರ ಮೇಲೆ ಆರ್ಪಿಎಫ್ ಲಾಠಿ ಚಾರ್ಜ್ ನಡೆಸಿದೆ.
ಪ್ರತಿಭಟನೆಗೆ ಭಾರಿ ಸಂಖ್ಯೆಯಲ್ಲಿ ಜನ ಸೇರುತ್ತಿರುವ ಹಿನ್ನೆಲೆಯಲ್ಲಿ ಸಂಸತ್ತಿನ ಸುತ್ತ ಬಿಎನ್ಎಸ್ ಸೆಕ್ಷನ್ 163ರ ಅಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಪ್ರತಿಭಟನಾ ಮೆರವಣಿಗೆಯ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಗಾಗಿ ದೆಹಲಿ ಮೆಟ್ರೊ ರೈಲು ನಿಗಮವು ಸೋಮವಾರ ರಾಜೀವ್ ಚೌಕ್, ಜನಪಥ್, ಪಟೇಲ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್ ಮತ್ತು ಸೇವಾ ತೀರ್ಥ ಸೇರಿ ಐದು ನಿಲ್ದಾಣಗಳನ್ನು ಮುಚ್ಚಿದೆ. ಮುಂದಿನ ಸೂಚನೆ ಬರುವವರೆಗೆ ಈ ಐದು ನಿಲ್ದಾಣಗಳು ಮುಚ್ಚಲ್ಪಟ್ಟಿರುತ್ತವೆ ಎಂದು ಡಿಎಂಆರ್ಸಿ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ.
ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಳನ್ನು ಜಾರಿಗೆ ತರುವಂತೆ ಒತ್ತಾಯಿಸಲು, ಸೋಮವಾರ ಆರಂಭವಾಗಲಿರುವ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿನತ್ತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ 'ಕಾಕ್ರೋಚ್ ಜನತಾ ಪಾರ್ಟಿ' ಈ ಹಿಂದೆಯೇ ಘೋಷಿಸಿತ್ತು.
ಈ ಸಂಬಂಧ ಅಧಿಕಾರಿಗಳು ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದಾರೆ. ಆದರೆ, ಮೆರವಣಿಗೆಗೆ ಯಾವುದೇ ಅನುಮತಿಯನ್ನು ಕೋರಲಾಗಿಲ್ಲ ಎಂದೂ ಅವರು ತಿಳಿಸಿದ್ದಾರೆ.
ಈ ನಡುವೆ ಕಾಕ್ರೋಚ್ ಜನತಾ ಪಕ್ಷವು ವಿವಾದದ ಕುರಿತಂತೆ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಲು ಇಚ್ಛಿಸಿರುವುದಾಗಿ ಹೇಳಿದೆ. ಅಲ್ಲದೇ, ನಿರಶನ ಅಂತ್ಯಕ್ಕೆ ಮೂರು ಷರತ್ತುಗಳನ್ನೊಳಗೊಂಡ ಕೈಬರಹದ ಪತ್ರವನ್ನು ಸೊನಮ್ ವಾಂಗ್ಚೂಕ್ ಬರೆದಿದ್ದಾರೆ.
ಈ ಬೆಳವಣಿಗೆಗಳ ನಡುವೆಯೇ ಸಫ್ದರ್ ಜಂಗ್ ಆಸ್ಪತ್ರೆಯಿಂದ ಸೊನಮ್ ವಾಂಗ್ಚೂಕ್ ಬಿಡುಗಡೆ ಕೋರಿ ತಾವು ಸಲ್ಲಿಸಿದ್ದ ಅರ್ಜಿಯನ್ನು ಮರು ಪರಿಶೀಲಿಸಬೇಕೆಂದು ಕೋರಿ ಅವರ ಪತ್ನಿ ಗೀತಾಂಜಲಿ ಮತ್ತೆ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

