ನವದೆಹಲಿ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯ ನೈತಿಕ ಹೊಣೆ ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಸರ್ಕಾರದೊಂದಿಗೆ ಯಾವುದೇ ಚರ್ಚೆ ನಡೆಸುವುದಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.
ಜೊತೆಗೆ, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ.
ಸಂಸತ್ ಭವನದ ಸಂಕೀರ್ಣದಲ್ಲಿ ಮಾತನಾಡಿದ ಅವರು, ಕಲಾಪದ ವೇಳೆ ತಮಗೆ ಮಾತನಾಡಲು ಅವಕಾಶ ನೀಡಲಿಲ್ಲ ಎಂದು ಆರೋಪಿಸಿದ್ದಾರೆ.
ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ಸಂಸದರು ಚರ್ಚೆ ಪ್ರಾರಂಭಿಸಲಿ ಎಂದು ಲೋಕಸಭೆಯಲ್ಲಿ ಹೇಳಿದರು. ಯಾರದ್ದಾದರೂ ಹೆಸರು ಪ್ರಸ್ತಾಪವಾದಾಗ ಅವರಿಗೆ ಉತ್ತರಿಸಲು ಅವಕಾಶ ನೀಡುವುದು ವಾಡಿಕೆ. ಆದರೆ, ನಾನು ರಿಜಿಜು ಅವರಿಗೆ ಉತ್ತರಿಸಲು ಎದ್ದು ನಿಂತಾಗ ನನಗೆ ಮಾತನಾಡಲು ಬಿಡಲಿಲ್ಲ ಮತ್ತು ನನ್ನ ಮೈಕ್ ಆಫ್ ಮಾಡಲಾಯಿತು ರಾಹುಲ್ ಗಾಂಧಿ ದೂರಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಮೇಲಿನ ಪೊಲೀಸ್ ಕ್ರಮಗಳ ಕುರಿತು ಪ್ರತಿಪಕ್ಷ ಮತ್ತು ಸರ್ಕಾರದ ನಡುವಿನ ವಾಕ್ಸಮರ ಮುಂದುವರಿದಿದೆ.
ನಾನು ವಿರೋಧ ಪಕ್ಷದ ನಿಲುವನ್ನು ಸ್ಪಷ್ಟವಾಗಿ ಮಂಡಿಸಲು ಬಯಸಿದ್ದೆ. ಭ್ರಷ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಪ್ರಧಾನಿ ವಿದ್ಯಾರ್ಥಿಗಳ ಕ್ಷಮೆ ಕೇಳಬೇಕು ಎಂಬುವುದು ವಿದ್ಯಾರ್ಥಿಗಳ ಪ್ರಮುಖ ಮೂರು ಬೇಡಿಕೆಗಳಾಗಿವೆ. ಇವು ಈಡೇರದ ಹೊರತು, ನಾವು ಯಾವುದೇ ಚರ್ಚೆ ನಡೆಸುವುದಿಲ್ಲ ಎಂದೂ ಅವರು ಸ್ವಷ್ಟಪಡಿಸಿದ್ದಾರೆ.
ನಾನು ವಿರೋಧ ಪಕ್ಷದ ನಿಲುವನ್ನು ಸ್ಪಷ್ಟವಾಗಿ ಮಂಡಿಸಲು ಬಯಸಿದ್ದೆ. ವಿದ್ಯಾರ್ಥಿಗಳ ಮೂರು ಮುಖ್ಯ ಬೇಡಿಕೆಗಳಿವೆ.
ಭ್ರಷ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು
ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು
ಮತ್ತು ಪ್ರಧಾನಿಯವರು ವಿದ್ಯಾರ್ಥಿಗಳಲ್ಲಿ ಕ್ಷಮೆ ಕೇಳಬೇಕು ಎಂದೂ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

