ನವದೆಹಲಿ: ಸಂಸತ್ತಿನ ಎರಡೂ ಸದನಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಮಸೂದೆಯನ್ನು ಅಂಗೀಕರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾತ್ರಿ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ.
ಈ ವಿಡಿಯೊಗೆ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನಾಯಕ ಅಭಿಜಿತ್ ದೀಪ್ಕೆ, 'ದೇಶದ ಭವಿಷ್ಯಕ್ಕಿಂತ ನಿಮ್ಮ ಚರ್ಮವೇ ಹೆಚ್ಚು ಹೊಳಪಿನಿಂದ ಕೂಡಿದೆ' ಎಂದು ಕಮೆಂಟ್ ಮಾಡಿದ್ದಾರೆ.
ಈ ಮೂಲಕ ಪ್ರಧಾನಿ ಮೋದಿಯವರ ವಿಡಿಯೊಗೆ ದೀಪ್ಕೆ ಮೊದಲ ಬಾರಿ ನೇರವಾಗಿ ಕಮೆಂಟ್ ಮಾಡಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆ ಬಳಿಕ ಮೋದಿ ಮೂರನೇ ಬಾರಿ ಸೆಲ್ಫಿ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಗುರುವಾರ ಹಂಚಿಕೊಂಡ ವಿಡಿಯೊ ಸಂದೇಶದಲ್ಲಿ 'ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯು ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೂ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಲು ಶಿಕ್ಷಣ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ ತರುವ ಅಗತ್ಯವಿತ್ತು. ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗುವ ಗುಂಪುಗಳು, ಮಾಫಿಯಾ ಮತ್ತು ಮಕ್ಕಳ ಭವಿಷ್ಯದ ಜತೆ ಚೆಲ್ಲಾಟ ಆಡುವವರನ್ನು ಸುಮ್ಮನೆ ಬಿಡುವುದಿಲ್ಲ' ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ನಡೆಸಿದ್ದ ಪ್ರತಿಭಟನೆಗೆ ಮಣಿದು ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದರು. ಬಳಿಕ ಪ್ರಲ್ಹಾದ ಜೋಷಿ ಅವರನ್ನು ಶಿಕ್ಷಣ ಸಚಿವರನ್ನಾಗಿ ನೇಮಕ ಮಾಡಲಾಗಿದೆ.
ಅಮಿತ್ ಶಾ ರಾಜೀನಾಮೆಗೆ ಆಗ್ರಹ
ಈಗ ಪ್ರತಿಭಟನೆ ಮಾಡದಿದ್ದರೂ ಸಿಜೆಪಿ ನಾಯಕ ದೀಪ್ಕೆ, ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಸಂಸತ್ ಚಲೊ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶ ನೀಡಿದ್ದಾರೆ ಎಂದು ಆರೋಪಿಸಿರುವ ಅಭಿಜಿತ್ ದೀಪ್ಕೆ, ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಪ್ರಸ್ತುತ ದೇಶದಲ್ಲಿ ಪ್ರಜಾಪ್ರಭುತ್ವ 'ಅಪಾಯದಲ್ಲಿದೆ' ಎಂದಿರುವ ಅವರು, ನ್ಯಾಯಾಂಗ ವ್ಯವಸ್ಥೆ ಸೇರಿದಂತೆ ಪ್ರಮುಖ ಸಾಂವಿಧಾನಿಕ ಸಂಸ್ಥೆಗಳ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದ್ದಾರೆ.

