ಪೆರ್ಲ: ದೇಶದ ಜನಸಂಖ್ಯೆಯು ಕೇವಲ ಒಂದು ಅಂಕಿ-ಅಂಶವಲ್ಲ, ಅದೊಂದು ಬಲಿಷ್ಠ ಮಾನವ ಬಂಡವಾಳ. ಭಾರತ ಹೊಂದಿರುವ ಅಪಾರ ಯುವಶಕ್ತಿಯನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಮಾತ್ರ ಸುಸ್ಥಿರ ಮತ್ತು ಪ್ರಗತಿಪರ ದೇಶವನ್ನು ನಿರ್ಮಿಸಲು ಸಾಧ್ಯ. "ಸುಸ್ಥಿರ ಅಭಿವೃದ್ಧಿ ಯ ಬೆಳವಣಿಗೆಯಲ್ಲಿ ಯುವ ಜನತೆಯ ಪಾತ್ರ; ಸವಾಲುಗಳು ಮತ್ತು ಅವಕಾಶಗಳು" ಎಂದು ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಕಾವ್ಯಶ್ರೀ ಪಿ. ಹೇಳಿದರು.
ಅವರು ಪೆರ್ಲದ ನಾಲಂದಾ ಕಲೆ ಮತ್ತು ವಿಜ್ಞಾನ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಆಶ್ರಯದಲ್ಲಿ ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ಆಯೋಜಿಸಲಾಗಿದ್ದ 'ವಿಶ್ವ ಜನಸಂಖ್ಯಾ ದಿನಾಚರಣೆ - 2026' ಕಾರ್ಯಕ್ರಮವನ್ನು ಉದ್ಘಾಟಿಸಿ, ದಿಕ್ಸೂಚಿ ಭಾಷಣ ಮಾಡಿದರು.
ಇದೇ ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾಗಿರುವ ಅವರು, ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕುತ್ತಾ ವಿದ್ಯಾರ್ಥಿಗಳಿಗೆ ಉನ್ನತ ಸಾಧನೆ ಮಾಡಲು ಪ್ರೇರೇಪಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲರಾದ ಶಂಕರ ಕೆ. ಮಾತನಾಡಿ, "ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಯ ಮೂಲಕ ಇಂದಿನ ಯುವ ಪೀಳಿಗೆಯು ದೇಶದ ಆರ್ಥಿಕತೆಗೆ ದೊಡ್ಡ ಶಕ್ತಿಯಾಗಬೇಕು" ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ತಮ್ಮ ಹೆಮ್ಮೆಯ ಹಳೆಯ ವಿದ್ಯಾರ್ಥಿನಿ ಇಂದು ಮುಖ್ಯ ಅತಿಥಿಯಾಗಿ ವೇದಿಕೆ ಹಂಚಿಕೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರು ಹಾಗೂ ಎನ್.ಎಸ್.ಎಸ್. ಯೋಜನಾಧಿಕಾರಿಯಾದ ವರ್ಷಿತ್ ಮತ್ತು ಕಾಲೇಜಿನ ಸಿಬ್ಬಂದಿ ಕಾರ್ಯದರ್ಶಿ ಶಿಲ್ಪಾ ಉಪಸ್ಥಿತರಿದ್ದು, ಶುಭ ಹಾರೈಸಿದರು.
ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಅನುಪಮಾ ಟಿ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿದ್ಯಾರ್ಥಿಗಳು ಪ್ರಾರ್ಥನೆಗೈದರು. ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಆಶಾಲತಾ ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರು ಹಾಗೂ ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

.jpg)
.jpg)
