ಕಾಸರಗೋಡು: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿನ ತೆರವಾಗಿರುವ ಹುದ್ದೆಗಳನ್ನು ಭರ್ತಿ ಮಾಡಲು, ತಾತ್ಕಾಲಿಕ ನೇಮಕಾತಿಗಾಗಿ ಸಂದರ್ಶನ ಪ್ರತಿ ಸೋಮವಾರ ಬೆಳಿಗ್ಗೆ 11ಕ್ಕೆ ಕಾಞಂಗಾಡಿನ ಚೆಮ್ಮಟ್ಟಂವಯಲಿನ ಜಿಲ್ಲಾಸ್ಪತ್ರೆಯಲ್ಲಿರುವ ಜಿಲ್ಲಾ ವೈದ್ಯಾಧಿಕಾರಿಗಳ (ಆರೋಗ್ಯ) ಕಚೇರಿಯಲ್ಲಿ ನಡೆಯಲಿರುವುದು.
ದಿನವೇತನ ಆಧಾರದಲ್ಲಿ ನೇಮಕಾತಿ ನಡೆಯಲಿದೆ. ಎಂಬಿಬಿಎಸ್ ಪದವಿ ಮತ್ತು ಟಿಸಿಎಂಸಿ ನೋಂದಣಿ ಹೊಂದಿರುವ ವೈದ್ಯರು ಸಂದರ್ಶನಕ್ಕೆ ಹಾಜರಾಗಬಹುದು. ಜಿಲ್ಲಾ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಜಿಲ್ಲಾ ವೈದ್ಯಾಧಿಕಾರಿ (ಆರೋಗ್ಯ) ಡಾ. ಕೆ.ಟಿ. ರೇಖಾ ಅವರು ಈ ವಿಷಯವನ್ನು ಪ್ರಕಟಿಸಿದ್ದಾರೆ. ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಕುಟುಂಬ ಆರೋಗ್ಯ ಕೇಂದ್ರಗಳು, ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳು ಮತ್ತು ಸಾಮಾನ್ಯ ಆಸ್ಪತ್ರೆಯಲ್ಲಿ ವೈದ್ಯರ ಹುದ್ದೆಗಳು ಖಾಲಿ ಇರುವ ಹಿನ್ನೆಲೆಯಲ್ಲಿ ಈ ತಾತ್ಕಾಲಿಕ ನೇಮಕಾತಿ ನಡೆಸಲಾಗುತ್ತದೆ.
ಜಿಲ್ಲಾ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಸಂಸದರು, ಶಾಸಕರು, ಜಿಲ್ಲಾ ಪಂಚಾಯತ್ ಅಧ್ಯಕ್ಷರು ಮತ್ತು ನಗರಸಭೆಯ ಪ್ರತಿನಿಧಿಗಳು ಭಾಗವಹಿಸಿದ್ದರು. ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯು ಸಾಮಾನ್ಯ ಜನರ ಮೇಲೆ ತೀವ್ರ ಪರಿಣಾಮ ಬೀರುತ್ತಿರುವ ಬಗ್ಗೆ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಘಿದ್ದು, ಜಿಲ್ಲೆಯ ಆರೋಗ್ಯ ವಲಯದ ವಿಶಿಷ್ಟ ಪರಿಸ್ಥಿತಿಯನ್ನು ಪರಿಗಣಿಸಿ, ತಾತ್ಕಾಲಿಕ ನೇಮಕಾತಿಗಾಗಿ ಕರ್ನಾಟಕ ವೈದ್ಯಕೀಯ ಮಂಡಳಿಯಲ್ಲಿ ನೋಂದಾಯಿತರಾದ ಎಂಬಿಬಿಎಸ್ ಪದವೀಧರರನ್ನು ಪರಿಗಣಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಬೇಕೆಂದು ಜನಪ್ರತಿನಿಧಿಗಳು ಒತ್ತಾಯಿಸಿದರು.

