ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ (ನೀಟ್) ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಪರವಾಗಿ ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಗುರುವಾರ ಧ್ವನಿ ಎತ್ತಿದ್ದಾರೆ.
ವಿದ್ಯಾರ್ಥಿಗಳ ಆತಂಕ ಮತ್ತು ಕಳವಳ ನ್ಯಾಯಯುತವಾಗಿದ್ದು, ಸರ್ಕಾರ ಇದನ್ನು ಬಲ ಪ್ರಯೋಗದ ಮೂಲಕ ಹತೋಟಿಗೆ ತರಲು ಯತ್ನಿಸುವ ಬದಲು ಸಹಾನುಭೂತಿಯಿಂದ ಆಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಜೋಶಿ, ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಯುವ ವಿದ್ಯಾರ್ಥಿಗಳು ದೆಹಲಿಯ ರಸ್ತೆಗಳಲ್ಲಿ ದಿನಗಟ್ಟಲೆ ಕುಳಿತು ಪ್ರತಿಭಟಿಸುತ್ತಿರುವುದನ್ನು ನೋಡುವುದು ಅತ್ಯಂತ ನೋವಿನ ಸಂಗತಿ ಎಂದಿದ್ದಾರೆ. ಪರೀಕ್ಷಾ ವ್ಯವಸ್ಥೆ ಕುರಿತು ವಿದ್ಯಾರ್ಥಿಗಳಲ್ಲಿರುವ ಆತಂಕ ನಿಜವಾದದ್ದು. ಇದನ್ನು ಸಹಾನುಭೂತಿಯಿಂದ ನಿರ್ವಹಿಸಿ, ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಯತ್ನಿಸಬೇಕು ಎಂದು ಅವರು ಬರೆದುಕೊಂಡಿದ್ದಾರೆ.
ಸೋಮವಾರ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮವನ್ನು ಉಲ್ಲೇಖಿಸಿದ ಅವರು, ಈ ವಿಷಯವನ್ನು ಕೇವಲ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಾಗಿ ನೋಡಿ, ಬಲಪ್ರಯೋಗದ ಮೂಲಕ ಹತೋಟಿಗೆ ತರಲು ಯತ್ನಿಸಬಾರದು ಎಂಬುದು ನನ್ನ ಕಳಕಳಿಯ ವಿನಂತಿ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳ ಮೇಲಿನ ಪೋಲಿಸರ ಕ್ರಮಕ್ಕೆ ಆತಂಕ ವ್ಯಕ್ತಪಡಿಸಿದ ಅವರು ಪ್ರತಿಭಟನೆಯಲ್ಲಿದ್ದ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಕುರಿತು ವಿಶೇಷ ಕಳವಳ ವ್ಯಕ್ತಪಡಿಸಿದ್ದಾರೆ. ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವುದು ನೋವುಂಟುಮಾಡಿದೆ ಎಂದು ಅವರು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಎದುರಾಗಿರುವ ಸಮಸ್ಯೆಗಳು ಮತ್ತು ಆತಂಕಗಳು ನೈಜವಾದವು ಎಂದು ಪುನರುಚ್ಚರಿಸಿರುವ ಜೋಶಿ, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವತ್ತ ಸರ್ಕಾರ ಹೆಜ್ಜೆ ಇಡಬೇಕು ಎಂದು ಒತ್ತಾಯಿಸಿದ್ದಾರೆ.

