ಅಲಹಾಬಾದ್: ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪದ ಕುರಿತು ಸಿಬಿಐ ತನಿಖೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಅಲಹಾಬಾದ್ ಉಚ್ಚ ನ್ಯಾಯಾಲಯ ಸೋಮವಾರ ನಿರಾಕರಿಸಿದೆ.
ಇದೇ ವಿಷಯಕ್ಕೆ ಸಂಬಂಧಿಸಿ ಅರ್ಜಿಯೊಂದು ಈಗಾಗಲೇ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬಾಕಿ ಉಳಿದಿದೆ ಎಂದು ಉಚ್ಚ ನ್ಯಾಯಾಲಯ ತಿಳಿಸಿದೆ.
ನ್ಯಾಯಮೂರ್ತಿಗಳಾದ ರಾಜನ್ ರಾಯ್ ಮತ್ತು ಮಂಜೀವ್ ಶುಕ್ಲಾ ಅವರನ್ನೊಳಗೊಂಡ ಉಚ್ಚ ನ್ಯಾಯಾಲಯದ ಲಕ್ನೋ ಪೀಠ ಮೋಹಿತ್ ಅಶೋಕ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಲೇವಾರಿ ಮಾಡಿದೆ.
ರಾಮ ಮಂದಿರದಲ್ಲಿ ಭಕ್ತರು ನೀಡಿದ ದೇಣಿಗೆ ಮತ್ತು ಕಾಣಿಕೆಗಳ ದುರುಪಯೋಗದ ಬಗ್ಗೆ ಸ್ವತಂತ್ರ್ಯ ತನಿಖೆ ನಡೆಸಬೇಕು ಎಂದು ಅರ್ಜಿದಾರರು ಕೋರಿದ್ದರು.
ಜೊತೆಗೆ ಮಹಾಲೇಖಪಾಲರಿಂದ ದೇವಾಲಯದ ಹಣಕಾಸಿನ ಲೆಕ್ಕಪರಿಶೋಧನೆ ನಡೆಸಲು ನಿರ್ದೇಶನ ನೀಡಬೇಕೆಂದೂ ಅರ್ಜಿಯಲ್ಲಿ ವಿನಂತಿಸಲಾಗಿದೆ.
ಈ ವಿಷಯ ಈಗಾಗಲೇ ಸುಪ್ರೀಂ ಕೋರ್ಟ್ನ ಪರಿಶೀಲನೆಯಲ್ಲಿದೆ ಎಂದು ಗಮನಿಸಿದ ಉಚ್ಚ ನ್ಯಾಯಾಲಯ, ಅರ್ಜಿಯ ಗುಣಾವಗುಣಗಳನ್ನು ಪರಿಶೀಲಿಸಲು ನಿರಾಕರಿಸಿತು ಮತ್ತು ಪ್ರಕರಣವನ್ನು ವಿಲೇವಾರಿ ಮಾಡಿತು.

