2025-26ನೇ ಸಾಲಿನ ಎಥೆನಾಲ್ ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಈ ಮಾಹಿತಿ ನೀಡಿದರು.
"ಪೆಟ್ರೋಲ್ನಲ್ಲಿ ಶೇ.20ರಷ್ಟು ಎಥೆನಾಲ್ ಮಿಶ್ರಣ ಮಾಡುವ ಯೋಜನೆಯು ಸರಕಾರದ ಪ್ರಾಯೋಗಿಕ ಕಾರ್ಯಕ್ರಮವಾಗಿದೆ. ಇದರ ಪರಿಣಾಮಗಳ ಕುರಿತು ಮುಂದಿನ ವರ್ಷದ ವೇಳೆಗೆ ಫಲಿತಾಂಶಗಳು ಲಭ್ಯವಾಗಲಿವೆ" ಎಂದು ಅವರು ಸುಪ್ರೀಂ ಕೋರ್ಟ್ಗೆ ತಿಳಿಸಿದರು.
ಪೆಟ್ರೋಲ್ನಲ್ಲಿ ಶೇ. 20ರಷ್ಟು ಎಥೆನಾಲ್ ಮಿಶ್ರಣದ ಗುರಿ ಸಾಧಿಸಲು ಕೇಂದ್ರ ಸರಕಾರ ರೂಪಿಸಿರುವ ನೀತಿಯ ಅನುಷ್ಠಾನದ ಮೇಲೆ ಕರ್ನಾಟಕ ಹೈಕೋರ್ಟ್ ಆದೇಶವು ಪರಿಣಾಮ ಬೀರಬಹುದು ಎಂದು BPCL ತನ್ನ ಅರ್ಜಿಯಲ್ಲಿ ವಾದಿಸಿದೆ.
ವಿಚಾರಣೆ ವೇಳೆ, ಕರ್ನಾಟಕ ಹೈಕೋರ್ಟ್ನ ಏಕಸದಸ್ಯ ಪೀಠದ ಆದೇಶದ ವಿರುದ್ಧ BPCL ಏಕೆ ವಿಭಾಗೀಯ ಪೀಠದ ಮೊರೆ ಹೋಗಿಲ್ಲ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿತು.
ಇದಕ್ಕೆ ಉತ್ತರಿಸಿದ ಅಟಾರ್ನಿ ಜನರಲ್, ಎಥೆನಾಲ್ ಪೂರೈಕೆ ಒಪ್ಪಂದಗಳನ್ನು ಈಗಾಗಲೇ ಅಂತಿಮಗೊಳಿಸಲಾಗಿದ್ದು, ಇದೇ ವಿಷಯಕ್ಕೆ ಸಂಬಂಧಿಸಿದ ಹಲವು ಅರ್ಜಿಗಳು ದೇಶದ ವಿವಿಧ ಹೈಕೋರ್ಟ್ಗಳಲ್ಲಿ ಬಾಕಿ ಇವೆ ಎಂದು ತಿಳಿಸಿದರು.
"ಈ ವಿಚಾರವು ರಾಷ್ಟ್ರೀಯ ನೀತಿಗೆ ಸಂಬಂಧಿಸಿದ್ದಾಗಿದ್ದು, ಅದರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ" ಎಂದು ಅವರು ಹೇಳಿದರು.
ಈ ಪ್ರಕರಣಕ್ಕೆ ತ್ವರಿತ ವಿಚಾರಣೆ ಅಗತ್ಯವಿರುವುದರಿಂದ, ಸಂಬಂಧಿತ ಪ್ರಕರಣಗಳನ್ನು ಒಟ್ಟಿಗೆ ಪರಿಗಣಿಸಲು ವರ್ಗಾವಣೆ ಅರ್ಜಿ ಸಲ್ಲಿಸಲು ಅನುಮತಿ ನೀಡುವಂತೆ ಅಟಾರ್ನಿ ಜನರಲ್ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದರು.

