ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯುವಂತೆ, ಅಧಿಕೃತ ಮಾಹಿತಿ ಅಥವಾ ನಿರ್ದೇಶನ ಬಂದ ನಂತರವಷ್ಟೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಹಲವು ದಿನಗಳಿಂದ ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ನಡೆಸುತ್ತಿತ್ತು. ಜುಲೈ 20ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಪ್ರತಿಭಟನಾಕಾರರ ವಿರುದ್ಧ ದೆಹಲಿ ಪೊಲೀಸರು 15 ರಿಂದ 20 ಎಫ್ಐಆರ್ ದಾಖಲು ಮಾಡಿದ್ದರು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಪ್ರತಿಭಟನೆಗೆ ಸಂಬಂಧಿಸಿದಂತೆ ಜುಲೈ 25ರಂದು ಸಿಜೆಪಿ ರಾಷ್ಟ್ರೀಯ ವಕ್ತಾರ ಆಶುತೋಷ್ ರಂಕಾ ಹಾಗೂ ಮುಖ್ಯ ವಕ್ತಾರ ಸೌರವ್ ದಾಸ್ ಅವರೊಂದಿಗೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ , ಜಿತೇಂದ್ರ ಸಿಂಗ್ ಮಾತುಕತೆ ನಡೆಸಿದ್ದರು.
ಈ ಮಾತುಕತೆಯಲ್ಲಿ ದೆಹಲಿ ಮಾತ್ರವಲ್ಲದೆ ಬಿಜೆಪಿ ಸರ್ಕಾರಗಳಿರುವ ರಾಜ್ಯಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಲ್ಲ ಎಫ್ಐಆರ್ಗಳನ್ನು ಹಿಂಪಡೆಯುವಂತೆ ಒತ್ತಾಯಿಸಲಾಗಿತ್ತು. ಈ ಬೇಡಿಕೆಗೆ ಸರ್ಕಾರವೂ ಒಪ್ಪಿಗೆ ಸೂಚಿಸಿ, ಶೀಘ್ರದಲ್ಲೇ ಪ್ರಕರಣಗಳನ್ನು ಹಿಂಪಡೆಯುವುದಾಗಿ ಭರವಸೆ ನೀಡಿತ್ತು.
ಈ ಸಂಬಂಧ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಲ್ಲ ಎಫ್ಐಆರ್ಗಳನ್ನು ಹಿಂಪಡೆಯುವಂತೆ ಅಧಿಕೃತ ಮಾರ್ಗಸೂಚಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಪೊಲೀಸ್ ಮೂಲಗಳು ತಿಳಿಸಿವೆ.
ಅದಾಗಿಯೂ, ಪ್ರತಿಭಟನೆ ವೇಳೆ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದವರ ಗುರುತು ಪತ್ತೆಗಾಗಿ ಸಿಸಿಟಿವಿ ಕ್ಯಾಮೆರಾವನ್ನು ಪರಿಶೀಲನೆ ನಡೆಸಲಾಗುತ್ತಿದೆ. ಈ ಪ್ರತಿಭಟನೆಯಲ್ಲಿ ಅಪರಾಧ ಹಿನ್ನೆಲೆಯುಳ್ಳ 2,500ಕ್ಕೂ ಜನರು ಭಾಗಿಯಾಗಿದ್ದರು. ಜುಲೈ 20ರಂದು ನಡೆದ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಪೊಲೀಸರು ಹಾಗೂ 70ಕ್ಕೂ ಅಧಿಕ ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರ ವಿರುದ್ಧ ಪ್ರಕರಣ ಹಿಂಪಡೆಯುವಂತೆ ಮಾತುಕತೆ ನಡೆದಿದ್ದರೂ ಹಿಂಸಾಚಾರಕ್ಕೆ ಕಾರಣ ಆದವರ ವಿರುದ್ಧ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

