ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್(TMC)ಗೆ ಮತ್ತೊಂದು ರಾಜಕೀಯ ಹಿನ್ನಡೆಯಾಗಿದ್ದು, ಪಕ್ಷದ ಮಾಜಿ ರಾಜ್ಯಸಭಾ ಸದಸ್ಯರಾದ ಸುಷ್ಮಿತಾ ದೇವ್, ಸುಖೇಂದು ಶೇಖರ್ ರೇ ಹಾಗೂ ಪ್ರಕಾಶ್ ಚಿಕ್ ಬರೈಕ್ ಅವರು ಗುರುವಾರ ಭಾರತೀಯ ಜನತಾ ಪಕ್ಷಕ್ಕೆ (BJP) ಸೇರ್ಪಡೆಯಾದರು.
ರಾಜ್ಯ ಬಿಜೆಪಿ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರ ಸಮ್ಮುಖದಲ್ಲಿ ಕೋಲ್ಕತ್ತಾದ ಸಾಲ್ಟ್ ಲೇಕ್ ನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೂವರು ನಾಯಕರನ್ನು ಪಕ್ಷಕ್ಕೆ ಅಧಿಕೃತವಾಗಿ ಬರಮಾಡಿಕೊಳ್ಳಲಾಯಿತು. ಬಿಜೆಪಿ ಧ್ವಜವನ್ನು ನೀಡಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಸಮಿಕ್ ಭಟ್ಟಾಚಾರ್ಯ, ಮೂವರು ಮಾಜಿ ಸಂಸದರ ಅನುಭವ ಮತ್ತು ರಾಜಕೀಯ ಪರಿಣತಿ ರಾಜ್ಯದಲ್ಲಿ ಬಿಜೆಪಿಯನ್ನು ಮತ್ತಷ್ಟು ಬಲಪಡಿಸಲು ನೆರವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ರಾಜ್ಯ ನಾಯಕರು ಉಪಸ್ಥಿತರಿದ್ದರು.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಸೋಲು ಕಂಡ ಬಳಿಕ, ಸುಷ್ಮಿತಾ ದೇವ್, ಸುಖೇಂದು ಶೇಖರ್ ರೇ ಹಾಗೂ ಪ್ರಕಾಶ್ ಚಿಕ್ ಬರೈಕ್ ಅವರು ಕಳೆದ ತಿಂಗಳು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ತೃಣಮೂಲ ಕಾಂಗ್ರೆಸ್ ತೊರೆದಿದ್ದರು. ಇದೀಗ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

