ನವದೆಹಲಿ: ನೇಪಾಳದ ಉತ್ತರ ಭಾಗದಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ದಿಢೀರ್ ಪ್ರವಾಹದಿಂದ ತೀವ್ರ ಹಾನಿ ಉಂಟಾಗಿದ್ದು, 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ನೂರಾರು ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತವು ವಾಯುಪಡೆ ವಿಮಾನಗಳ ಮೂಲಕ ಪರಿಹಾರ ಸಾಮಗ್ರಿ ಕಳುಹಿಸಿಕೊಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸರ್ಕಾರದ ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ(ಎಚ್ಎಇಡಿಆರ್) ಉಪಕ್ರಮದಡಿ ಔಷಧ, ಪಡಿತರ ಸೇರಿದಂತೆ ತುರ್ತು ಪರಿಹಾರ ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆ ಕೈಗೊಳ್ಳಲು ರಾಷ್ಟ್ರೀಯ ವಿಪತ್ತು ಸ್ಪಂದನಾ ತಂಡಗಳನ್ನೂ(ಎನ್ಡಿಆರ್ಎಫ್) ಕಳುಹಿಸಲು ಸರ್ಕಾರ ನಿರ್ಧರಿಸಿದೆ ಎಂದೂ ಅವರು ಹೇಳಿದ್ದಾರೆ.
ಟಿಬೆಟ್ ಗಡಿಯ ಎರಡು ಜಿಲ್ಲೆಗಳಲ್ಲಿ ದಿಢೀರ್ ಪ್ರವಾಹ ಉಂಟಾಗಿದ್ದು, 22 ಮಂದಿ ಮೃತಪಟ್ಟಿದ್ದಾರೆ. 400ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ನದಿಪಾತ್ರದ ಪ್ರದೇಶಗಳಲ್ಲಿ ಭಾರಿ ವಿನಾಶ ಉಂಟಾಗಿದೆ.
ರಸುವಾ ಜಿಲ್ಲೆಯಲ್ಲಿ ನಾಪತ್ತೆಯಾದವರ ಪೈಕಿ 105 ಮಂದಿ ಭಾರತೀಯರು, 37 ಮಂದಿ ಎನ್ಆರ್ಐಗಳು ಸೇರಿದ್ದಾರೆ.
ಭೋಟೆ ಕೋಶಿ ನದಿಯಲ್ಲಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ದಿಢೀರ್ ಪ್ರವಾಹ ತಲೆದೋರಿದ್ದು, ಟಿಬೆಟ್ನೊಂದಿಗೆ ಗಡಿ ಹಂಚಿಕೊಂಡಿರುವ ರಸುವಾ ಮತ್ತು ಧಾಡಿಂಗ್ ಜಿಲ್ಲೆಗಳು ಹಾಗೂ ಕಠ್ಮಂಡುವಿನ ನೈರುತ್ಯಕ್ಕಿರುವ ನುವಾಕೋಟ್ ಜಿಲ್ಲೆ ಮೇಲೆ ಪರಿಣಾಮ ಬೀರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೇಪಾಳದಲ್ಲಿ ಪ್ರವಾಹ ಹಿನ್ನೆಲೆ ಉತ್ತರ ಪ್ರದೇಶ ಮತ್ತು ಬಿಹಾರದ ಮೇಲೂ ಪ್ರಭಾವ ಬೀರುವ ಸಾಧ್ಯತೆ ಇದ್ದು, ಹೈ ಅಲರ್ಟ್ ಘೋಷಿಸಲಾಗಿದೆ.

