ಪೆಶಾವರ : ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದ ಮೆರವಣಿಗೆ ಸಂದರ್ಭದಲ್ಲಿ ಪೊಲೀಸ್ ಠಾಣೆ ಮೇಲೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸ್ವಾತ್ ಜಿಲ್ಲೆಯ ಕಬಾಲ್ ಪಟ್ಟಣದಲ್ಲಿ ಸ್ವಾತ್ ಶಾಂತಿ ಮೆರವಣಿಗೆ ನಡೆಯುತ್ತಿದ್ದ ವೇಳೆ ಭಾನುವಾರ ದಾಳಿ ನಡೆದಿತ್ತು.
ಪರಿಣಾಮವಾಗಿ ಐವರು ಭದ್ರತಾ ಸಿಬ್ಬಂದಿ ಸೇರಿದಂತೆ ಕನಿಷ್ಠ 14 ಮಂದಿ ಮೃತಪಟ್ಟಿದ್ದರು. 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಪೈಕಿ ತೀವ್ರವಾಗಿ ಗಾಯಗೊಂಡಿದ್ದ ಮೂವರು ಸೋಮವಾರ ಮೃತಪಟ್ಟಿದ್ದಾರೆ' ಎಂದು ತಿಳಿಸಿದ್ದಾರೆ.
ಸ್ಫೋಟಕ್ಕೆ 'ಹ್ಯಾಂಡ್ ಗ್ರೆನೇಡ್' ಬಳಕೆ ಮಾಡಲಾಗಿದೆ ಎಂದು ತನಿಖೆಯಲ್ಲಿ ತಿಳದುಬಂದಿದೆ ಎಂದು ಹೇಳಿದ್ದಾರೆ.
ಈವರೆಗೆ ಯಾವುದೇ ಸಂಘಟನೆಯೂ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ.
ಧಾರ್ಮಿಕ ವಿದ್ವಾಂಸ ಸಾವು:
ದಾಳಿಯಲ್ಲಿ ಧಾರ್ಮಿಕ ವಿದ್ವಾಂಸ ಮುಫ್ತಿ ಜಾನ್ ಮಿರ್ ಎಂಬವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಿರ್ ಅವರು ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿಸಿದ್ದಾರೆ.

