ಗುವಾಹಟಿ: ಅಸ್ಸಾಂ ಮತ್ತು ಅರುಣಾಚಲ ಪ್ರದೇಶದ ನಡುವೆ ದಶಕಗಳಿಂದ ನಡೆಯುತ್ತಿರುವ ಗಡಿ ವಿವಾದವು ಸೋಮವಾರ ಸಂಘರ್ಷಕ್ಕೆ ತಿರುಗಿದ್ದು, ಅಪರಿಚಿತ ವ್ಯಕ್ತಿಗಳು ನಡೆಸಿದ ಗುಂಡಿನ ದಾಳಿಯಲ್ಲಿ 18 ಮಂದಿ ಗಾಯಗೊಂಡಿದ್ದಾರೆ.
ಮಿಂಗ್ಮಾಂಗ್ ಪ್ರದೇಶದ ಬಳಿ ಗುಂಡಿನ ದಾಳಿ ನಡೆದಿದ್ದು, ಉತ್ತರ ಅಸ್ಸಾಂನ ಧೇಮಾಜಿ ಜಿಲ್ಲೆಯವರು ಗಾಯಗೊಂಡಿದ್ದಾರೆ. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.
'ವಿವಾದಿತ ಪ್ರದೇಶದಲ್ಲಿ ಬೆಳಿಗ್ಗೆಯಿಂದ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ನಂತರ ಅಸ್ಸಾಂ ಕಡೆಯ ಗ್ರಾಮಸ್ಥರ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ' ಎಂದು ಗುವಾಹಟಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
'ಈ ಗುಂಡಿನ ದಾಳಿಯಲ್ಲಿ ಅರುಣಾಚಲ ಪ್ರದೇಶದ ಪೊಲೀಸರು ಭಾಗಿಯಾಗಿದ್ದಾರೆ' ಎಂದು ವರದಿಯಾಗಿತ್ತು. ಆದರೆ, ಇದನ್ನು ಪೊಲೀಸರು ಮತ್ತು ಆಡಳಿತವು ದೃಢಪಡಿಸಿಲ್ಲ.
ಈ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, 'ಬಿಜೆಪಿ ಆಡಳಿತದ ಎರಡು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ಉದ್ವಿಗ್ನ ಪರಿಸ್ಥಿತಿಯನ್ನು ಶಮನಗೊಳಿಸಲು ಮಾತುಕತೆಯಲ್ಲಿ ತೊಡಗಿದ್ದಾರೆ. ಅಸ್ಸಾಂನ ಭೂಮಿಯನ್ನು ಇತರರು ಆಕ್ರಮಿಸಿಕೊಂಡಿದ್ದಾರೆಯೇ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ' ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಆದರೆ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.

