ಡೆಹ್ರಾಡೂನ್: ಚಮೋಲಿ ಜಿಲ್ಲೆಯಲ್ಲಿ ಜಲವಿದ್ಯುತ್ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಸುರಂಗವು ಗುರುವಾರ ಸಂಜೆ ಕುಸಿದುಬಿದ್ದಿದ್ದು, ಮಣ್ಣು, ನೀರು ಒಳಗೆ ನುಗ್ಗಿದ ಪರಿಣಾಮ ಆರು ಮಂದಿ ಮೃತಪಟ್ಟು, 14 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸುರಂಗದೊಳಗೆ ಸಿಲುಕಿದ್ದ 22 ಕಾರ್ಮಿಕರಲ್ಲಿ 20 ಮಂದಿಯನ್ನು ಹೊರಗೆ ಕರೆತರಲಾಗಿದೆ.
ಅವರಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಉಳಿದ 14 ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಉಳಿದ ಇಬ್ಬರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಇದು ತೆಹ್ರಿ ಜಲವಿದ್ಯುತ್ ಅಭಿವೃದ್ಧಿ ನಿಗಮದ (ಟಿಎಚ್ಡಿಸಿ) ಜಲವಿದ್ಯುತ್ ಯೋಜನೆಗಾಗಿ ನಿರ್ಮಾಣವಾಗುತ್ತಿರುವ ಸುರಂಗವಾಗಿದೆ. ಗುರುವಾರ ಸಂಜೆ ಸುಮಾರು 6:30 ಅಥವಾ 6:45ರ ವೇಳೆಗೆ, ಸುರಂಗದ ಒಂದು ಭಾಗ ಕುಸಿದು ಭಾರಿ ಪ್ರಮಾಣದ ಅವಶೇಷ ಮತ್ತು ನೀರು ಸುರಂಗದೊಳಗೆ ನುಗ್ಗಿ ಬಂದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ' ಎಂದು ಚಮೋಲಿ ಜಿಲ್ಲಾಧಿಕಾರಿ ಗೌರವ್ ಕುಮಾರ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಕನ್ಸ್ಟ್ರಕ್ಷನ್ ಕಂಪನಿಯು (ಎಚ್ಸಿಸಿ) ಯೋಜನೆಯನ್ನು ನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
'ಸಮರೋಪಾದಿಯಲ್ಲಿ ಕಾರ್ಯಾಚರಣೆ'
ಸದ್ಯ ರಕ್ಷಿಸಲಾಗಿರುವ ಕಾರ್ಮಿಕರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಸಾಧ್ಯವಿರುವ ಎಲ್ಲ ನೆರವು ನೀಡುವ ಭರವಸೆ ನೀಡಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ರಕ್ಷಣಾ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆಯುತ್ತಿದೆ. ಸುರಂಗದಲ್ಲಿ ಸಿಲುಕಿರುವ ಎಲ್ಲ ಕಾರ್ಮಿಕರನ್ನು ಸುರಕ್ಷಿತವಾಗಿ ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

