ಪಟ್ನಾ: ಬಿಹಾರದ ಲಖಿಸರೈ ಜಿಲ್ಲೆಯ ಅಶೋಕಧಾಮ ದೇವಾಲಯದಲ್ಲಿ ಸೋಮವಾರ ಸಂಭವಿಸಿದ ಕಾಲ್ತುಳಿತದಲ್ಲಿ ಏಳು ಮಂದಿ ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ.
ಶ್ರಾವಣ ಮಾಸದ ಸೋಮವಾರದಂದು ಶಿವನಿಗೆ ಪವಿತ್ರ ಜಲಾಭಿಷೇಕ ನೆರವೇರಿಸಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
ಬೆಳಿಗ್ಗೆ 6.30ಕ್ಕೆ ಇನ್ನೂ ಎರಡು ರೈಲುಗಳು ಬಂದಿದ್ದು, ಅವುಗಳಲ್ಲಿದ್ದ ಸಾವಿರಾರು ಭಕ್ತರು ರೈಲು ನಿಲ್ದಾಣದಿಂದ ದೇವಸ್ಥಾನದ ಕಡೆಗೆ ನೇರವಾಗಿ ಧಾವಿಸಿದ್ದರು.
'ಸೋಮವಾರದ ಪೂಜೆಗೆ ಅಗತ್ಯ ವ್ಯವಸ್ಥೆ ಮಾಡಲಾಗಿತ್ತು. ಸರದಿ ಸಾಲಿನಲ್ಲಿ ಸಾಗಲೆಂದು ಬ್ಯಾರಿಕೇಡ್ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಆದರೆ, ಜನದಟ್ಟಣೆ ಹೆಚ್ಚಾಗಿದ್ದರಿಂದ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಕೂಡಲೇ ರಕ್ಷಣಾ ಕಾರ್ಯ ಕೈಗೊಳ್ಳಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ' ಎಂದು ಲಖಿಸರೈ ಜಿಲ್ಲಾಧಿಕಾರಿ ಶೈಲೇಂದ್ರ ಕುಮಾರ್ ತಿಳಿಸಿದ್ದಾರೆ.
'ಸಮೀಪದ ಹೊಲದಲ್ಲಿ ವಿದ್ಯುತ್ ಕಂಬ ಮುರಿದು ವಿದ್ಯುತ್ ಸ್ಪರ್ಶಿಸಿ ಕೆಲವರು ಮೃತಪಟ್ಟಿದ್ದಾರೆ ಎಂಬ ವದಂತಿಯೂ ಕಾಲ್ತುಳಿತಕ್ಕೆ ಕಾರಣವಾಗಿದೆ' ಎಂದು ಬಿಹಾರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
₹4 ಲಕ್ಷ ಪರಿಹಾರ: 'ಈ ಘಟನೆಯಿಂದ ತೀವ್ರ ನೋವಾಗಿದೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ ₹4 ಲಕ್ಷ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ವೈದ್ಯಕೀಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ' ಎಂದು ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
ಲಖಿಸರೈ ಜಿಲ್ಲೆಯ ಅಶೋಕಧಾಮ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು -ಪಿಟಿಐ ಚಿತ್ರನರೇಂದ್ರ ಮೋದಿ, ಪ್ರಧಾನಿಈ ನೋವಿನ ಸಮಯದಲ್ಲಿ ಮೃತರ ಕುಟುಂಬಗಳೊಂದಿಗೆ ನಾನಿದ್ದೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಅಗತ್ಯ ನೆರವು ನೀಡುತ್ತಿದೆ ದ್ರೌಪದಿ ಮುರ್ಮು, ರಾಷ್ಟ್ರಪತಿಕಾಲ್ತುಳಿತದಲ್ಲಿ ಭಕ್ತರು ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಗಾಯಾಳುಗಳು ಶೀಘ್ರ ಗುಣಮುಖವಾಗಲೆಂದು ಪ್ರಾರ್ಥಿಸುತ್ತೇನೆ

