ನವದೆಹಲಿ: ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆ ಎದುರು ಧರಣಿ ನಡೆಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಓಲೈಕೆ ರಾಜಕಾರಣದಲ್ಲಿ ತೊಡಗಿರುವ ರಾಹುಲ್ ಅವರು ಕಾನೂನು ಮತ್ತು ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ ಎಂದೂ ದೂರಿದೆ.
ವಂದೇ ಮಾತರಂ ವಿಷಯದಲ್ಲಿ ಕಾಂಗ್ರೆಸ್ ಹೊಂದಿರುವ ನಿಲುವಿನ ಬಗ್ಗೆ ಜನರ ಗಮನವನ್ನು ಬೇರೆಡೆ ಸೆಳೆಯುವ ಉದ್ದೇಶದಿಂದ ವಿದ್ಯಾರ್ಥಿಗಳ ಹೆಸರಿನಲ್ಲಿ ರಾಹುಲ್ ರಾಜಕೀಯ ಮಾಡುತ್ತಿದ್ದಾರೆ ಎಂದು ಸಂಸದ ರವಿಶಂಕರ್ ಪ್ರಸಾದ್ ಆರೋಪಿಸಿದ್ದಾರೆ.
ವಂದೇ ಮಾತರಂ ಕುರಿತಾದ ನಿಲುವಿನಿಂದಾಗಿ ಕಾಂಗ್ರೆಸ್ ಇಕ್ಕಟ್ಟಿಗೆ ಸಿಲುಕಿದ್ದು, ದೇಶದ ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ ಎಂದು ದೂರಿರುವ ಪ್ರಸಾದ್, ಪೊಲೀಸರಿಂದ ಪೂರ್ವಾನುಮತಿ ಅಥವಾ ಮಾಹಿತಿ ನೀಡದೆ ಪ್ರತಿಭಟನೆ ನಡೆಸುವ ರಾಹುಲ್ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.
ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳನ್ನು ವಿರೋಧಿಸಿ ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಕೈಗೊಂಡ ಪ್ರತಿಭಟನೆ ವೇಳೆ ನಡೆದಿದೆ ಎನ್ನಲಾದ ಹಿಂಸಾಚಾರದ ಆರೋಪಗಳ ಕುರಿತು ತನಿಖೆ ನಡೆಯುತ್ತಿರುವಾಗಲೇ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ ಎಂದು ಪ್ರಸಾದ್ ಗುಡುಗಿದ್ದಾರೆ.
ಕಾಂಗ್ರೆಸ್ ಈಗ ರಾಹುಲ್ ಗಾಂಧಿಯವರ ಓಲೈಕೆ ರಾಜಕಾರಣದಿಂದ ನಡೆಸುತ್ತಿರುವ ಪಕ್ಷವಾಗಿದೆ ಎಂದೂ ಅವರು ಕುಟುಕಿದ್ದಾರೆ.
ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜುಲೈ 20ರಂದು ನಡೆದ ಪ್ರತಿಭಟನೆಯಲ್ಲಿ 19 ವರ್ಷದ ವಿದ್ಯಾರ್ಥಿ ಸಾಹಿಲ್ ಲೋಚಾಬ್ ಪೆಲೆಟ್ ಗನ್ ದಾಳಿಯಿಂದಾಗಿ ಗಾಯಗೊಂಡ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆ ಎದುರು ಧರಣಿ ಕುಳಿತಿದ್ದಾರೆ.
'ಮೇಲಿಂದ ಆದೇಶವಿದೆ' ಎಂಬ ಕಾರಣಕ್ಕೆ ಎಫ್ಐಆರ್ ದಾಖಲಿಸಲು ಸಾಧ್ಯವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನ್ಯಾಯಕ್ಕೆ ಹೆದರುತ್ತಿದ್ದಾರೆ ಎಂದು ರಾಹುಲ್ ದೂರಿದ್ದಾರೆ.

