ನವದೆಹಲಿ: ವಿದ್ಯಾರ್ಥಿ ಪ್ರತಿಭಟನಕಾರರ ವಿರುದ್ಧದ ಪೊಲೀಸ್ 'ಬಲಪ್ರಯೋಗ'ದ ಕುರಿತು ಗೃಹ ಸಚಿವ ಅಮಿತ್ ಶಾ ಅವರಿಂದ ಹೇಳಿಕೆ ಮತ್ತು ರಾಮಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ಕಳ್ಳತನದ ಚರ್ಚೆಗೆ ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದರಿಂದ ಸಂಸತ್ತಿನ ಉಭಯ ಸದನಗಳ ಕಲಾಪಕ್ಕೆ ಮಂಗಳವಾರವೂ ಅಡಚಣೆ ಉಂಟಾಯಿತು.
ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ ಸದಸ್ಯರು ತೀವ್ರ ಗದ್ದಲ ಎಬ್ಬಿಸಿದರು. ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರ ಬಂಧನದ ವಿಷಯವನ್ನು ಡಿಎಂಕೆ ಪ್ರಸ್ತಾಪಿಸಿತು. ಈ ಬೆಳವಣಿಗೆಗಳಿಂದಾಗಿ ಕಲಾಪವನ್ನು ಪದೇ ಪದೇ ಮುಂದೂಡಬೇಕಾಯಿತು.
ವಿರೋಧ ಪಕ್ಷಗಳ ಗದ್ದಲದ ನಡುವೆಯೂ ಸರ್ಕಾರ ಕೆಲವು ಮಸೂದೆಗಳಿಗೆ ಅಂಗೀಕಾರ ಪಡೆಯಿತು. ಧನ ವಿನಿಯೋಗ ಮಸೂದೆ-2026ಕ್ಕೆ ಲೋಕಸಭೆ ಅಂಗೀಕಾರ ನೀಡಿದರೆ, ತೆರಿಗೆ ಮತ್ತು ಇತರ ಕಾನೂನುಗಳ (ತಿದ್ದುಪಡಿ) ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಯಿತು. ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆಯನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು. ಈ ಮಸೂದೆಯನ್ನು ಲೋಕಸಭೆಯಲ್ಲಿ ಈಗಾಗಲೇ ಅಂಗೀಕರಿಸಲಾಗಿದೆ.
ರಾಮಮಂದಿರ ದೇಣಿಗೆ ಕಳ್ಳತನ, ಅಮಿತ್ ಶಾ ಅವರ ಉಪಸ್ಥಿತಿಗೆ ಆಗ್ರಹ ಮತ್ತು ಉದಯನಿಧಿ ಅವರ ಬಂಧನದ ಕುರಿತು ಡಿಎಂಕೆ ಪ್ರಸ್ತಾಪಿಸಿದ ವಿಷಯಗಳ ಬಗ್ಗೆ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ರಾಜ್ಯಸಭೆಯಲ್ಲಿ ದಿನವಿಡೀ ಮಾತಿನ ಚಕಮಕಿ ನಡೆಯಿತು.
ಬೆಳಿಗ್ಗೆ 11ಕ್ಕೆ ರಾಜ್ಯಸಭೆಯ ಕಲಾಪ ಆರಂಭವಾಗುತ್ತಿದ್ದಂತೆಯೇ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು 'ಚಂದಾ ಚೋರಿ' (ದೇಣಿಗೆ ಕಳ್ಳತನ) ವಿಷಯ ಪ್ರಸ್ತಾಪಿಸಿದರು. ಆದರೆ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಅವರು ಹೆಚ್ಚು ಮಾತನಾಡಲು ಖರ್ಗೆ ಅವರಿಗೆ ಅವಕಾಶ ನೀಡಲಿಲ್ಲ.
ಶೂನ್ಯ ವೇಳೆ ಮತ್ತು ಪ್ರಶ್ನೋತ್ತರ ವೇಳೆಯಲ್ಲಿ ವಿಪಕ್ಷ ಸದಸ್ಯರ ಪ್ರತಿಭಟನೆಯಿಂದಾಗಿ ಕಲಾಪ ಮುಂದೂಡಲಾಯಿತು. ಮಧ್ಯಾಹ್ನ 2ಕ್ಕೆ ಸದನವು ಮತ್ತೆ ಸೇರಿದಾಗಲೂ ಗದ್ದಲ ಮುಂದುವರಿಯಿತು. ಜನನ-ಮರಣಗಳ ನೋಂದಣಿಗೆ ಸಂಬಂಧಿಸಿದ ಮಸೂದೆಯನ್ನು ಕೈಗೆತ್ತಿಕೊಂಡಾಗಲೂ ವಿರೋಧ ಪಕ್ಷಗಳ ಸದಸ್ಯರು ಪ್ರತಿಭಟನೆ ಮುಂದುವರಿಸಿದರು.
ಬೆಳಿಗ್ಗೆ 11ಕ್ಕೆ ಲೋಕಸಭೆ ಕಲಾಪ ಆರಂಭವಾದಾಗಲೂ ಗದ್ದಲ ಕಂಡುಬಂತು. ಇದರಿಂದ ಕಲಾಪವನ್ನು ಮಧ್ಯಾಹ್ನ 2ಕ್ಕೆ ಮುಂದೂಡಲಾಯಿತು. ಮಧ್ಯಾಹ್ನದ ಅಧಿವೇಶನದಲ್ಲಿ ಧನ ವಿನಿಯೋಗ ಮಸೂದೆ ಅಂಗೀಕಾರಗೊಂಡ ಬಳಿಕ ದಿನದ ಕಲಾಪವನ್ನು ಮುಕ್ತಾಯಗೊಳಿಸಲಾಯಿತು.

